kranthikidi.com
ತಾಜಾಸುದ್ದಿರಾಜ್ಯ

ಡಿಕೆಶಿ ಪಟ್ಟಾಭಿಷೇಕಕ್ಕೆ ರಾಮನಗರದಿಂದ 40 ರಿಂದ 50 ಸಾವಿರ ಜನ..!

ರಾಮನಗರ : ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಅವರ ತವರು ಜಿಲ್ಲೆ ರಾಮನಗರದಲ್ಲಿ ಭರ್ಜರಿ ಸಿದ್ಧತೆಗಳು ಆರಂಭವಾಗಿವೆ. ಹೈಕಮಾಂಡ್ ಮಟ್ಟದಲ್ಲಿ ಪ್ರಕ್ರಿಯೆಗಳು ಚುರುಕಾಗಿರುವ ಬೆನ್ನಲ್ಲೇ, ಪದಗ್ರಹಣ ಕಾರ್ಯಕ್ರಮಕ್ಕೆ ರಾಮನಗರ ಜಿಲ್ಲೆಯಿಂದಲೇ ಬರೋಬ್ಬರಿ 40 ರಿಂದ 50 ಸಾವಿರ ಜನರನ್ನು ಬೆಂಗಳೂರಿಗೆ ಕರೆದೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆ.

ಡಿಕೆಶಿ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಗಳ ಸಂಬಂಧ ರಾಮನಗರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರ ತುರ್ತು ಪೂರ್ವಭಾವಿ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲೆಯಿಂದ ಗರಿಷ್ಠ ಸಂಖ್ಯೆಯಲ್ಲಿ ಜನರನ್ನು ಕಾರ್ಯಕ್ರಮಕ್ಕೆ ಸುರಕ್ಷಿತವಾಗಿ ಕರೆದೊಯ್ಯುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು.

ಈ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬೇಕು ಎನ್ನುವುದು ಇಡೀ ರಾಮನಗರ ಜಿಲ್ಲೆಯ ಜನರ ಕನಸು. ಈಗ ಆ ಸುದಿನ ಹತ್ತಿರ ಬಂದಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ನಮ್ಮ ಜಿಲ್ಲೆಯಿಂದ ಜನರನ್ನು ಕರೆದುಕೊಂಡು ಹೋಗುವುದು ನಮ್ಮ ಜವಾಬ್ದಾರಿ. ಇದಕ್ಕಾಗಿ ಬಸ್ಸು, ವಾಹನಗಳು ಹಾಗೂ ಊಟ-ತಿಂಡಿಯ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಇದು ನಮ್ಮದೇ ಕಾರ್ಯಕ್ರಮ ಎಂಬಂತೆ ಪ್ರತಿಯೊಬ್ಬರೂ ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ ಎಂದರು.

ಜಿಲ್ಲೆಯ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲೆಯಿಂದ ಒಟ್ಟು 40 ರಿಂದ 50 ಸಾವಿರ ಜನ ಭಾಗಿಯಾಗುವ ನಿರೀಕ್ಷೆಯಿದೆ. ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 10 ಸಾವಿರ ಕಾರ್ಯಕರ್ತರನ್ನು ಕರೆತರಲು ಯೋಜನೆ ರೂಪಿಸಲಾಗಿದೆ. ಬಹುಶಃ ಮುಂದಿನ ಬುಧವಾರದೊಳಗೆ ಅಥವಾ ಅದಕ್ಕಿಂತ ಮೊದಲೇ ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಪ್ರಮುಖ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ದಿನಾಂಕ ಸೇರಿದಂತೆ ಎಲ್ಲಾ ಅಂತಿಮ ತೀರ್ಮಾನಗಳು ಹೊರಬೀಳಲಿವೆ ಎಂದು ತಿಳಿಸಿದರು.

Related posts

ಕಬಿನಿ ಡ್ಯಾಮ್‌ನ ಗೇಟ್ ಓಪನ್; 25 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ..!

Kalpana Editor

ಪೇಪರ್‌ ಲೀಕ್‌ಗೆ 10 ವರ್ಷ ಜೈಲು, 10 ಕೋಟಿ ದಂಡ – ಸಂಸತ್ತಿನಲ್ಲಿ ಬಿಲ್‌ ಪಾಸ್‌; ನಮೋ ವಿಡಿಯೋ ಸಂದೇಶ..!

Kalpana Editor

ವಾಂಗ್ಚುಕ್‌ರನ್ನು ಭೇಟಿಯಾದ ಕೇಂದ್ರ ಸಚಿವರು; ಇಂದು ಸಿಜೆಪಿ ಜೊತೆ ಮತ್ತೊಂದು ಸಭೆ..!

Kalpana Editor