ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ದೊಡ್ಡ ಮಟ್ಟದ ರಿಲೀಫ್ ಸಿಕ್ಕಿದೆ. ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ ಅನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.
ರ್ಯಾಲಿಯೊಂದರಲ್ಲಿ ರಾಹುಲ್ ಗಾಂಧಿಯವರು ಸಾವರ್ಕರ್ ಅವರನ್ನು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ವಕೀಲ ನೃಪೇಂದ್ರ ಪಾಂಡೆ ಎಂಬುವವರು ದೂರು ದಾಖಲಿಸಿದ್ದರು. ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರಿದ್ದ ಪೀಠವು, ಕಾನೂನುಬದ್ಧ ಅನುಮತಿಯ ಕೊರತೆಯನ್ನು ಎತ್ತಿಹಿಡಿದಿದೆ.
ಇಂತಹ ಪ್ರಕರಣಗಳಲ್ಲಿ ಕಾನೂನಿನ ಅಡಿಯಲ್ಲಿ ಪ್ರಾಸಿಕ್ಯೂಷನ್ಗೆ ಸರ್ಕಾರದ ಪೂರ್ವಾನುಮತಿ ಅಗತ್ಯವಿರುತ್ತದೆ. ಆದರೆ ಉತ್ತರ ಪ್ರದೇಶ ಸರ್ಕಾರದಿಂದ ಯಾವುದೇ ಅನುಮತಿ ಸಿಕ್ಕಿಲ್ಲ. ಅನುಮತಿ ಇಲ್ಲ ಎಂದಮೇಲೆ ಪ್ರಕರಣ ಅಲ್ಲಿಗೇ ಮುಕ್ತಾಯವಾಗುತ್ತದೆ. ನೀವು ಕಾನೂನನ್ನು ಪಾಲಿಸಲೇಬೇಕು ಎಂದು ನ್ಯಾಯಮೂರ್ತಿ ದತ್ತಾ ರಾಜ್ಯ ಸರ್ಕಾರ ಮತ್ತು ದೂರುದಾರರಿಗೆ ಸ್ಪಷ್ಟಪಡಿಸಿದರು.
ಲಕ್ನೋ ಮ್ಯಾಜಿಸ್ಟ್ರೇಟ್ ಹೊರಡಿಸಿದ್ದ ಸಮನ್ಸ್ ಹಾಗೂ ಪಾಂಡೆ ದಾಖಲಿಸಿದ್ದ ದೂರು ಎರಡನ್ನೂ ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ರದ್ದುಗೊಳಿಸಿತು. ಮ್ಯಾಜಿಸ್ಟ್ರೇಟ್ ಕೋರ್ಟ್ ಜಾರಿ ಮಾಡಿದ್ದ ಸಮನ್ಸ್ ಅನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಹಿಂದೆ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದ ಉತ್ತರ ಪ್ರದೇಶ ಸರ್ಕಾರ, ರಾಹುಲ್ ಗಾಂಧಿ ಸಮಾಜದಲ್ಲಿ ದ್ವೇಷ ಹಾಗೂ ವೈಷಮ್ಯ ಹರಡುವ ಉದ್ದೇಶದಿಂದಲೇ ಪೂರ್ವಯೋಜಿತವಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಅವರ ಅರ್ಜಿಯನ್ನು ವಜಾಗೊಳಿಸುವಂತೆ ಕೋರಿತ್ತು. ಆದರೆ ಪ್ರಾಸಿಕ್ಯೂಷನ್ಗೆ ಅಗತ್ಯವಿರುವ ಅಧಿಕೃತ ಅನುಮತಿ ಇಲ್ಲದಿರುವುದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ವಿಚಾರಣಾ ನ್ಯಾಯಾಲಯದ ಸಮನ್ಸ್ ಹಾಗೂ ದೂರು ಎರಡನ್ನೂ ವಜಾಗೊಳಿಸಿದೆ. ಇದನ್ನೂ ಓದಿ : ಮನೆಯಲ್ಲಿ ಜರ್ಮ್ಸ್ ಹೆಚ್ಚಾಗದಂತೆ ತಡೆಯುವುದು ಹೇಗೆ..? ಕೆಲವು ಸರಳ ಸಲಹೆಗಳು..!
