29.2 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಪಾಲರ ಕಾರ್ಯದರ್ಶಿಗೆ ಪತ್ರ ಹಸ್ತಾಂತರ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜೀನಾಮೆ ಸಲ್ಲಿಕೆಗೂ ಮುನ್ನ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ ‘ಬ್ರೇಕ್‌ಫಾಸ್ಟ್‌ ಮೀಟಿಂಗ್’ ನಡೆಯಿತು. ಕಾವೇರಿ ನಿವಾಸದ ಅಂಗಳ ಸದಾ ಜನಸಾಗರದಿಂದ, ಅಧಿಕಾರದ ಗಿಜಿಗುಡುವಿಕೆಯಿಂದ ತುಂಬಿರುತ್ತಿತ್ತು. ಆದರೆ ಇಂದು ಅಲ್ಲಿ ಆವರಿಸಿದ್ದ ಮೌನವೇ ಬೇರೆಯಾಗಿತ್ತು.

ಇಂದು ಉಪಹಾರ ಸಭೆಯಲ್ಲಿ ಭಾಗಿಯಾಗಿದ್ದ ಪ್ರಮುಖ ಮಂತ್ರಿಗಳು ಮತ್ತು ಆಪ್ತ ನಾಯಕರು ಸಿದ್ದರಾಮಯ್ಯ ಅವರ ಸುದೀರ್ಘ ಹೋರಾಟದ ಪಯಣವನ್ನು ನೆನೆದು ಭಾವುಕರಾದರು. ಹಲವು ಸಚಿವರ ಕಣ್ಣಾಲಿಗಳು ತೇವಗೊಂಡಿದ್ದವು. ಸಹೋದ್ಯೋಗಿ ಮಂತ್ರಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಮಧ್ಯಾಹ್ನ ಭೋಜನ ಬಳಿಕ ರಾಜೀನಾಮೆ ಪತ್ರ ಹಿಡಿದು ಕಾರಿನಲ್ಲಿ ಲೋಕಭವನದತ್ತ (ರಾಜಭವನ) ಹೆಜ್ಜೆ ಹಾಕಿದರು.

ರಾಜ್ಯಪಾಲರು ಪ್ರಸ್ತುತ ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ.

ರಾಜ್ಯಪಾಲರು ನಾಳೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಪಾಲರು ಮರಳಿದ ಬಳಿಕವಷ್ಟೇ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಚರಿತ್ರೆಯ ದಣಿವರಿಯದ ಹೋರಾಟಗಾರ ಸಿದ್ದರಾಮಯ್ಯ ಅವರ 2ನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ. ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿ ಅವರ ಸಂದೇಶಕ್ಕೆ ಗೌರವ ನೀಡಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ರಾಜ್ಯ ರಾಜಕಾರಣದ ಮಹತ್ವದ ಹಂತವೊಂದಕ್ಕೆ ಭಾವುಕ ತೆರೆ ಎಳೆದಿದ್ದಾರೆ.

Related posts

ನೂತನ ಸಿಎಂ ಡಿಕೆ ಶಿವಕುಮಾರ್‌ಗೆ ಮೋದಿ, ಹೆಚ್‌ಡಿಕೆ ಶುಭಾಶಯ..!

Kalpana Editor

ನೆಪೊಟಿಸಮ್ ಚರ್ಚೆ: ಶಿವಣ್ಣ-ಅಪ್ಪು ಹೆಸರು ಹೇಳಿದ್ದಕ್ಕೆ, ಸುದೀಪ್ ಸ್ಪಷ್ಟನೆ..!

Kalpana Editor

ಭಟ್ಕಳ ದುರಂತ; ಕಪ್ಪೆಚಿಪ್ಪು ಆರಿಸಲು ಹೋದವರ ಸಾವಿನ ಸಂಖ್ಯೆ 11ಕ್ಕೆ ಏರಿಕೆ..!

Kalpana Editor