ಹುಬ್ಬಳ್ಳಿ : ರಾಜ್ಯದಲ್ಲೇ 2ನೇ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಡೆದಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಸಾಕಷ್ಟು ಹೋರಾಟಗಳು ನಡೆದಿದ್ದವು. ಇತ್ತೀಚೆಗೆ ಪಾಲಿಕೆ ವಿಭಜನೆಗೆ ಷರತ್ತುಬದ್ಧ ಅನುಮೋದನೆ ಕೂಡ ದೊರೆತಿತ್ತು. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಪ್ರತ್ಯಕ ಪಾಲಿಕೆ ಕಡಿತಕ್ಕೆ ಸಹಿ ಬೆನ್ನಲ್ಲೇ ಬೃಹತ್ ಮಹಾನಗರ ಪಾಲಿಕೆಯ ಠರಾವು ಅಸಿಂಧುಗೊಂಡಿದೆ. ಹೀಗಾಗಿ ಈ ಹಿಂದೆ ಕೈಗೊಳ್ಳಲಾಗಿದ್ದ ಹುಬ್ಬಳ್ಳಿ-ಧಾರವಾಡ ಬೃಹತ್ ಮಹಾನಗರ ಪಾಲಿಕೆಯ ಠರಾವು ರದ್ದಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪಾಲಿಕೆ ಮೇಯರ್ ಜೋತಿ ಪಾಟೀಲ್, ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮಾಡಲು ಕೈಗೊಳ್ಳಲಾಗಿದ್ದ ಠರಾವು ಅಧಿಕೃತವಾಗಿ ರದ್ದಾಗಲಿದ್ದು, ಅವಳಿ ನಗರಗಳ ಪಾಲಿಕೆ ವಿಭಜನೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ತಿಳಿಸಿದರು.
ನಾವು ಈ ಹಿಂದೆ ಪಾಲಿಕೆ ಅಭಿವೃದ್ಧಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಕೋರಿದ್ದೆವು. ಆದರೆ ಸರ್ಕಾರದಿಂದ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಬಿಡುಗಡೆಯಾಗಿರಲಿಲ್ಲ. 16ನೇ ಹಣಕಾಸು ಆಯೋಗದ ನಿಯಮಾವಳಿಗಳ ಪ್ರಕಾರ, 10 ಲಕ್ಷಕ್ಕಿಂತ ಅಧಿಕ ಜನಸಂಖ್ಯೆ ಹೊಂದಿರುವ ನಗರಗಳಿಗೆ ಹೆಚ್ಚಿನ ಅನುದಾನ ದೊರೆಯುತ್ತದೆ. ಈ ತಾಂತ್ರಿಕ ಕಾರಣದಿಂದಾಗಿ ಹುಬ್ಬಳ್ಳಿ-ಧಾರವಾಡವನ್ನು ಒಳಗೊಂಡ ಬೃಹತ್ ಮಹಾನಗರ ಪಾಲಿಕೆ ಮಾಡಲು ಈ ಹಿಂದೆ ನಿರ್ಧಾರ ಕೈಗೊಳ್ಳಲಾಗಿತ್ತು ಎಂದರು.
ಈ ವೇಳೆ ಧಾರವಾಡವನ್ನು ಪ್ರತ್ಯೇಕ ಪಾಲಿಕೆಯನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ವ್ಯಾಪಕ ಹೋರಾಟಗಳು ನಡೆದಿದ್ದವು. ಈ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದ್ದು, ಪ್ರತ್ಯೇಕ ಪಾಲಿಕೆ ರಚನೆಯ ಕಡತಕ್ಕೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ರಾಜ್ಯಪಾಲರ ಈ ನಿರ್ಧಾರದಿಂದಾಗಿ, ಈ ಹಿಂದೆ ಕೈಗೊಳ್ಳಲಾಗಿದ್ದ ಬೃಹತ್ ಮಹಾನಗರ ಪಾಲಿಕೆ ರಚನೆಯ ಠರಾವು ಇದೀಗ ತಾನಾಗಿಯೇ ಅಸಿಂಧುವಾಗುತ್ತದೆ. ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವ ನಿರ್ಧಾರಕ್ಕೆ ಎಲ್ಲರೂ ಸಮ್ಮತಿ ನೀಡಿದ್ದಾರೆ ಎಂದು ತಿಳಿಸಿದರು.
ಹುಬ್ಬಳ್ಳಿ ಮತ್ತು ಧಾರವಾಡ ಪಾಲಿಕೆಗಳ ವಿಭಜನೆಯ ಪ್ರಕ್ರಿಯೆ ಪೂರ್ಣಗೊಂಡ ನಂತರ, ಸರ್ಕಾರವು ಎರಡೂ ಪಾಲಿಕೆಗಳಿಗೆ ಪ್ರತ್ಯೇಕವಾಗಿ ಹೆಚ್ಚಿನ ಅಭಿವೃದ್ಧಿ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಮೇಯರ್ ಜ್ಯೋತಿ ಪಾಟೀಲ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
