ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಆರೋಪಗಳು ಕೇಳಿಬರುತ್ತಿವೆ. ಪುಡಿ ರೌಡಿಗಳ ಅಟ್ಟಹಾಸ, ಡ್ರಗ್ಸ್, ಗಾಂಜಾ, ಜೂಜಾಟ, ಅಕ್ರಮ ಮರಳು ದಂಧೆ, ಮಟ್ಕಾ ಸೇರಿದಂತೆ ಅಪರಾಧ ಪ್ರಕರಣಗಳು ಹೆಚ್ಚಿತ್ತಿವೆ. ಅದರಲ್ಲೂ ಮುಖ್ಯವಾಗಿ ಬೆಂಗಳೂರಿನಲ್ಲಿ ಕೊಲೆ, ಸುಲಿಗೆ, ಡ್ರಗ್ಸ್ ದಂಧೆ ಎಗ್ಗಿಲ್ಲದೇ ನಡೆಯುತ್ತಿದ್ದು, ಇದೀಗ ಇವುಗಳಿಗೆ ಕಡಿವಾಣ ಹಾಕಲು ನೂತನ ಸಿಎಂ ಡಿಕೆ ಶಿವಕುಮಾರ್ ಸಮರ ಸಾರಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಇಂದು (ಜೂನ್ 04) ವಿಧಾನಸೌಧದಲ್ಲಿ ನಡೆದ ಮೊದಲ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಈ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ರೌಡಿ ನಿಗ್ರಹಕ್ಕೆ ವಿಶೇಷ ತಂಡಗಳ ರಚನೆಗೆ ಆದೇಶಿಸಿದ್ದಾರೆ. ರಾಜ್ಯದ ಪ್ರತಿ ತಾಲೂಕಿನಲ್ಲಿ ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಲು ಮತ್ತು ಅವರನ್ನು ಮಟ್ಟಹಾಕಲು ವಿಶೇಷ ಸ್ಕ್ವಾಡ್ಗಳನ್ನು ಸ್ಥಾಪಿಸಬೇಕೆಂದು ಹೇಳಿದ್ದೇನೆ. ಇದನ್ನೂ ಓದಿ : 24 ಕೋಟಿ ಮೌಲ್ಯದ ಜಮೀನು ಖರೀದಿಸಿದ ಯಶ್-ರಾಧಿಕಾ ದಂಪತಿ..!
ಈ ತಂಡಗಳು 10 ರಿಂದ 15 ಪೊಲೀಸ್ ಕಾನ್ಸ್ಟೇಬಲ್ಗಳನ್ನು ಒಳಗೊಂಡಿರುತ್ತವೆ. ಹಳೆಯ ರೌಡಿಗಳು ಮತ್ತು ಹೊಸದಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಯುವಕರ ಮೇಲೆ ನಿಗಾ ಇಡುವುದು, ಅವರನ್ನು ಪತ್ತೆಹಚ್ಚಿ ದಾರಿಗೆ ತರುವುದು ಮತ್ತು ಯಾವುದೇ ಕ್ರಿಮಿನಲ್ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳುವುದು ಈ ತಂಡಗಳ ಪ್ರಮುಖ ಜವಾಬ್ದಾರಿಯಾಗಿದೆ. ಇದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಬಲಪಡಿಸಲು ಮತ್ತು ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸಲು ಸಹಕಾರಿಯಾಗಲಿದೆ ಎಂದಿದ್ದಾರೆ.
