ಮುಂಬೈ : ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಭಾರತ ತಂಡದ ಸ್ಟಾರ್ ವೇಗಿ ಮೊಹಮದ್ ಸಿರಾಜ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಸ್ಥಾನಕ್ಕೆ ಕರ್ನಾಟಕದ ವೇಗಿ ಪ್ರಸಿದ್ಧ್ ಕೃಷ್ಣ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ಈ ಕುರಿತು ಬಿಸಿಸಿಐ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಮುಂದಿನ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿಗಳನ್ನು ಗಮನದಲ್ಲಿಟ್ಟುಕೊಂಡು, ಸಿರಾಜ್ ಅವರ ಕಾರ್ಯದೊತ್ತಡವನ್ನು ತಗ್ಗಿಸಲು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಸಿಐ 2 ಸರಣಿಗಳಿಗೆ ಭಾರತ ತಂಡವನ್ನು ಪ್ರಕಟಿಸಿತ್ತು.
ಈ ವೇಳೆ ಮೊಹಮ್ಮದ್ ಸಿರಾಜ್ ಸ್ಥಾನ ಗಿಟ್ಟಿಸಿಕೊಂಡಿದ್ದರು. ಆದರೆ ಇದೀಗ ಬಿಸಿಸಿಐ, ಸಿರಾಜ್ ಬದಲಿಗೆ ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆ ಮಾಡಿದೆ. 2026ರ ಐಪಿಎಲ್ನಲ್ಲಿ ಗುಜರಾತ್ ಟೈಟನ್ಸ್ ಪರ ಎಲ್ಲಾ 17 ಪಂದ್ಯಗಳನ್ನು ಆಡಿ 19 ವಿಕೆಟ್ ಕಬಳಿಸಿದ್ದ ಸಿರಾಜ್, ಆ ಬಳಿಕ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲೂ ಭಾಗವಹಿಸಿದ್ದರು. ನಿರಂತರ ಕ್ರಿಕೆಟ್ ಆಡುತ್ತಿರುವ ಕಾರಣ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಬಿಸಿಸಿಐ ವೈದ್ಯಕೀಯ ತಂಡ ಮತ್ತು ತಂಡದ ಆಡಳಿತ ಮಂಡಳಿ ಜಂಟಿ ಚರ್ಚೆಯ ಬಳಿಕ ಈ ತೀರ್ಮಾನಕ್ಕೆ ಬಂದಿವೆ.
ವಿಶ್ವಕಪ್ ವಿಜೇತ ನಾಯಕ ಸೂರ್ಯಕುಮಾರ್ ಯಾದವ್ ಬದಲಿಗೆ ಈ ಪ್ರವಾಸಕ್ಕೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದ್ದು, ತಿಲಕ್ ವರ್ಮಾ ಉಪನಾಯಕರಾಗಿದ್ದಾರೆ. ಜೂ.36 ಮತ್ತು 28ರಂದು ಐರ್ಲೆಂಡ್ ವಿರುದ್ಧ ಎರಡು ಟಿ20 ಪಂದ್ಯಗಳು ನಡೆಯಲಿದ್ದು, ಬಳಿಕ ಜುಲೈ 1ರಿಂದ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ. ಇದನ್ನೂ ಓದಿ : ಮೈಗ್ರೇನ್ ಸಮಸ್ಯೆಗೂ, ಹೃದಯದ ಆರೋಗ್ಯಕ್ಕೂ ಸಂಬಂಧವಿದೆಯೇ..?!
ಭಾರತ ಟಿ20 ತಂಡ : ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಈಶನ್ ಕಿಶನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಪ್ರಿನ್ಸ್ ಯಾದವ್ ಹಾಗೂ ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ.
