ಇಂದು ಮಾಗಡಿ ತಾಲ್ಲೂಕಿನ ಚಂದೂರಾಯನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಅರಣ್ಯ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು, ರೈತ ಉತ್ಪಾದಕರ ಸಂಘಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಮುಂಗಾರು ತಾಂತ್ರಿಕ ಆಂದೋಲನ – 2026” ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಪದ್ಮಶ್ರೀ ಡಾ. ಸಿ.ಎನ್. ಮಂಜುನಾಥ್ ರವರು ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರೈತರೇ ದೇಶದ ನಿಜವಾದ ವಿಐಪಿಗಳು, ಭಾರತದ ಆರ್ಥಿಕತೆಯ ಬೆನ್ನೆಲುಬು ಕೃಷಿ ಕ್ಷೇತ್ರವಾಗಿದೆ. ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ ಹಾಗೂ ಮೀನುಗಾರಿಕೆ ಕ್ಷೇತ್ರಗಳು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿವೆ” ಎಂದು ಹೇಳಿದರು. ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ ಅವರು, ಕೃಷಿ ವಿಜ್ಞಾನ ಕೇಂದ್ರಗಳು ರೈತರಿಗೆ ಜ್ಞಾನ, ಮಾಹಿತಿ ಹಾಗೂ ಆಧುನಿಕ ತಂತ್ರಜ್ಞಾನ ಒದಗಿಸುವ ಅಕ್ಷಯಪಾತ್ರೆಗಳಾಗಿವೆ ಎಂದು ಅಭಿಪ್ರಾಯಪಟ್ಟರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ 12 ವರ್ಷಗಳಲ್ಲಿ ಕೃಷಿ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಕೃಷಿ ಬಜೆಟ್ ಸುಮಾರು 14 ಸಾವಿರ ಕೋಟಿಯಿಂದ 1.4 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದು ತಿಳಿಸಿದರು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ ಹಲವು ಯೋಜನೆಗಳ ಮೂಲಕ ರೈತರಿಗೆ ನೇರ ನೆರವು ನೀಡಲಾಗುತ್ತಿದೆ ಎಂದರು. ರೈತರು ಉತ್ತಮ ಗುಣಮಟ್ಟದ ಬೀಜ, ಮಣ್ಣಿನ ಆರೋಗ್ಯ, ನೀರಿನ ಸಮರ್ಪಕ ಬಳಕೆ ಹಾಗೂ ಆಧುನಿಕ ತಂತ್ರಜ್ಞಾನಗಳ ಕುರಿತು ಕೃಷಿ ವಿಜ್ಞಾನ ಕೇಂದ್ರಗಳಿಂದ ಮಾಹಿತಿ ಪಡೆದು ಕಡಿಮೆ ಜಮೀನಿನಲ್ಲಿ ಹೆಚ್ಚಿನ ಇಳುವರಿ ಪಡೆಯಬೇಕು ಎಂದು ಸಲಹೆ ನೀಡಿದರು.
ಸಾವಯವ ಕೃಷಿಯ ಮಹತ್ವವನ್ನು ವಿವರಿಸಿದ ಅವರು, “ಮನುಷ್ಯನ ಆರೋಗ್ಯ ಭೂಮಿಯ ಆರೋಗ್ಯದ ಮೇಲೆ ಅವಲಂಬಿತವಾಗಿದೆ. ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆ ಕಡಿಮೆ ಮಾಡಿ ಸಾವಯವ ಕೃಷಿಯತ್ತ ಹೆಚ್ಚಿನ ಒಲವು ತೋರಬೇಕು. ಆರೋಗ್ಯಕರ ಆಹಾರ ಮತ್ತು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಾವಯವ ಕೃಷಿ ಅತ್ಯಗತ್ಯ” ಎಂದು ಹೇಳಿದರು. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಬೆಂಬಲ ಬೆಲೆ, ಬೆಳೆ ವಿಮೆ ಹಾಗೂ ವಿವಿಧ ಕೃಷಿ ಯೋಜನೆಗಳ ಮೂಲಕ ರೈತರ ಆದಾಯ ಹೆಚ್ಚಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕೋರ್ಸ್ಗಳ ಶುಲ್ಕ ಹೆಚ್ಚಳ ಇಲ್ಲ – ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಡಾ. ಬಿ.ಎಸ್. ಶ್ವೇತಾ ಹಾಗೂ ಅವರ ತಂಡವನ್ನು ಅಭಿನಂದಿಸಿದ ಸಂಸದರು, ರೈತರಿಗೆ ತಾಂತ್ರಿಕ ಜ್ಞಾನ ಮತ್ತು ನವೀನ ಕೃಷಿ ಪದ್ಧತಿಗಳ ಮಾಹಿತಿ ನೀಡುವಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಪಾತ್ರ ಶ್ಲಾಘನೀಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಎ. ದೇವೇಗೌಡ ರವರು, ಡಾ. ಬಿ. ಎಸ್. ಶ್ವೇತಾ, ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ಚಂದೂರಾಯನಹಳ್ಳಿ, ಮಾಗಡಿ ತಾಲ್ಲೂಕು, ಡಾ. ಪಿ. ವೆಂಕಟರಮಣ, ಡೀನ್, ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು ಹಾಗೂ ಹಲವು ಗಣ್ಯರು ಮತ್ತು ರೈತರು ಉಪಸ್ಥಿತರಿದ್ದರು.
