ತುಮಕೂರು : ಉದ್ಯೋಗ, ಶಿಕ್ಷಣ ಹಾಗೂ ವ್ಯಾಪಾರ ವಹಿವಾಟುಗಳಿಗಾಗಿ ಕಲ್ಪತರು ನಾಡು ತುಮಕೂರಿನಿಂದ ರಾಜಧಾನಿ ಬೆಂಗಳೂರಿಗೆ ದಿನನಿತ್ಯ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಕೇವಲ ಎರಡು ಪಥಗಳ ರೈಲ್ವೆ ಹಳಿ ಇರುವುದರಿಂದ ರೈಲುಗಳ ಸಂಚಾರ ವಿಳಂಬವಾಗುತ್ತಿದ್ದು, ಪ್ರಯಾಣಿಕರು ಪರದಾಡಬೇಕಿದೆ.
ಈ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣ ಮಹತ್ವದ ಯೋಜನೆ ಬಗ್ಗೆ ಘೋಷಣೆ ಮಾಡಿದ್ದು, ಬೆಂಗಳೂರು-ತುಮಕೂರು ನಡುವೆ ಚತುಷ್ಪಥ ರೈಲು ಮಾರ್ಗ ನಿರ್ಮಾಣದ ಪೂರ್ವ ಸಿದ್ಧತೆಗಳು ಚುರುಕಾಗಿವೆ. ಈ ಉದ್ದೇಶಿತ ಬೃಹತ್ ಯೋಜನೆಗಾಗಿ ಈಗಾಗಲೇ ವಿಸ್ತೃತ ಯೋಜನಾ ವರದಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಅಷ್ಟೇ ಅಲ್ಲದೆ, ರೈಲ್ವೆ ಇಲಾಖೆಯ ಅತ್ಯುನ್ನತ ತಾಂತ್ರಿಕ ಸಮಿತಿಯು ಈ ವರದಿಯನ್ನು ಪರಿಶೀಲಿಸಿ ಅನುಮೋದನೆ ನೀಡಿದೆ. ಈ ಪ್ರಕ್ರಿಯೆಯು ರೈಲ್ವೆ ಮಂಡಳಿಯ ಅಂತಿಮ ಒಪ್ಪಿಗೆಯ ಹಂತದಲ್ಲಿದ್ದು, ಬೋರ್ಡ್ ಮುದ್ರೆ ಬೀಳುತ್ತಿದ್ದಂತೆ ಯೋಜನೆ ಅಧಿಕೃತವಾಗಿ ಕಾರ್ಯರೂಪಕ್ಕೆ ಬರಲಿದೆ ಎಂದು ಸಚಿವರು ತಿಳಿಸಿದ್ದಾರೆ. ಅಂದಾಜು 6,000 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಈ ಚತುಷ್ಪಥ ರೈಲು ಮಾರ್ಗದ ಬೃಹತ್ ಮೂಲಸೌಕರ್ಯ ಕಾಮಗಾರಿ ನಡೆಯಲಿದೆ.
ಯೋಜನೆಗೆ ಅಗತ್ಯವಿರುವ ಹೆಚ್ಚುವರಿ ಜಮೀನನ್ನು ಗುರುತಿಸುವ ಕಾರ್ಯ ಭರದಿಂದ ಸಾಗುತ್ತಿದ್ದು, ಮುಂದಿನ ಐದಾರು ತಿಂಗಳುಗಳ ಅವಧಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯು ಸಹ ಅಧಿಕೃತವಾಗಿ ಆರಂಭವಾಗಲಿದೆ ಎಂದು ವಿ. ಸೋಮಣ್ಣ ಮುನ್ಸೂಚನೆ ನೀಡಿದ್ದಾರೆ. ಈ ನಾಲ್ಕು ಪಥಗಳ ಮಾರ್ಗ ಪೂರ್ಣಗೊಂಡರೆ, ಎಕ್ಸ್ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳು ಯಾವುದೇ ಸಿಗ್ನಲ್ ಕಾಯುವಿಕೆಯಿಲ್ಲದೆ ಸಂಚರಿಸಬಹುದಾಗಿದ್ದು, ಬೆಂಗಳೂರು-ತುಮಕೂರು ನಡುವಿನ ಪ್ರಯಾಣದ ಸಮಯ ಅರ್ಧಕ್ಕರ್ಧ ಕಡಿಮೆ ಆಗಲಿದೆ. ಇದನ್ನೂ ಓದಿ : ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ತರಬೇಕು, ಯತ್ನಾಳ್ರನ್ನ ವಿಪಕ್ಷ ನಾಯಕನನ್ನಾಗಿ ಮಾಡಬೇಕು – ಕುಮಾರ್ ಬಂಗಾರಪ್ಪ
