ಟೆಹ್ರಾನ್ : ಇರಾನ್ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿಯ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿದ್ದಾರೆ.
ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಅಂತ್ಯಕ್ರಿಯೆಯನ್ನು ಸಂಘರ್ಷದಿಂದಾಗಿ ಮುಂದೂಡಲಾಗಿತ್ತು. ಇದೀಗ ಜುಲೈ 4ರಿಂದ ಅಂತ್ಯಕ್ರಿಯೆಯ ವಿಧಿವಿಧಾನಗಳು ಆರಂಭವಾಗಲಿದ್ದು, ಇರಾನ್ ಸೇರಿದಂತೆ ವಿವಿಧ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ. ಈ ವೇಳೆ 1 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ.
ವರದಿಗಳ ಪ್ರಕಾರ, ಅಯತೊಲ್ಲಾ ಖಮೇನಿಯ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ತೆಹ್ರಾನ್ನ `ಗ್ರಾಂಡ್ ಮೊಸಲ್ಲಾ’ ಸಂಕೀರ್ಣದಲ್ಲಿ ಇರಿಸಲಾಗುವುದು. ಅಲ್ಲದೇ ತೆಹ್ರಾನ್ ಮತ್ತು ಕೋಮ್ ನಗರಗಳಲ್ಲಿ ಬೃಹತ್ ಮೆರವಣಿಗೆ ನಡೆಯಲಿದ್ದು, ಇದರೊಂದಿಗೆ ಇರಾಕ್ನ ಪವಿತ್ರ ನಗರಗಳಾದ ನಜಾಫ್ ಮತ್ತು ಕರ್ಬಲಾದಲ್ಲೂ ವಿಶೇಷ ಪ್ರಾರ್ಥನೆ ನಡೆಯಲಿದೆ.
ಜುಲೈ 9ರಂದು ಖಮೇನಿಯ ತವರು ಮಶ್ಹದ್ನಲ್ಲಿರುವ ಪ್ರಸಿದ್ಧ `ಇಮಾಮ್ ರೆಜಾ’ ಮಸೀದಿಯಲ್ಲಿ ಅಂತಿಮ ಪ್ರಕ್ರಿಯೆ ನೆರವೇರಲಿದೆ. ಸುಮಾರು ನಾಲ್ಕು ದಶಕಗಳ ಕಾಲ ಇರಾನ್ನ ರಾಜಕೀಯ ವ್ಯವಸ್ಥೆಯನ್ನು ಮುನ್ನಡೆಸಿದ್ದ ನಾಯಕನಿಗೆ ಅಂತಿಮ ವಿದಾಯ ಹೇಳಲು ಕೋಟ್ಯಂತರ ಜನರು ಆಗಮಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿಗೆ ಆಹ್ವಾನಿಸಿದ್ದು, ಈ ಕಾರ್ಯಕ್ರಮಕ್ಕೆ ಭಾಗಿಯಾಗುವ ಬಗ್ಗೆ ಇನ್ನು ಪ್ರಧಾನಿ ಕಚೇರಿ ಪ್ರತಿಕ್ರಿಯಿಸಿಲ್ಲ.
ಫೆಬ್ರವರಿ 28ರಂದು ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಇದು 1989ರಲ್ಲಿ ಇರಾನ್ನ ಸಂಸ್ಥಾಪಕ ಅಯತೋಲ್ಲಾ ರುಹೊಲ್ಲಾ ಖೊಮೆನಿ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾದ 1 ಕೋಟಿ ಜನರ ದಾಖಲೆಯನ್ನು ಮುರಿಯುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ ಇರಾನ್ ಸರ್ಕಾರ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಇದನ್ನೂ ಓದಿ : ತಪ್ಪು ತಿಳುವಳಿಕೆಯಿಂದ ವಿಡಿಯೋ ಮಾಡಿದ್ದೇವೆ; ಕ್ಷಮೆ ಕೇಳಿದ ನಿವೇದಿತಾ ಗೌಡ
