July 12, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಎಸ್ಐಆರ್ ದುರುಪಯೋಗ; ಕೇಂದ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಕೊಟ್ಟ ಎನ್‌ಡಿಎ

ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಎಸ್ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ದುರುಪಯೋಗ ಮಾಡಿಕೊಂಡು ಮತದಾರರ ಪಟ್ಟಿಯನ್ನು ತಿರುಚುತ್ತಿರುವುದರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಎನ್.ಡಿ.ಎ ನಿಯೋಗ ರಾಷ್ಟ್ರದ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿತು. ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ಅವರ ನೇತೃತ್ವದ ನಿಯೋಗವು ನವದೆಹಲಿಯಲ್ಲಿ ಮಂಗಳವಾರ ಮುಖ್ಯ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಸರಕಾರ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಹಳಿತಪ್ಪಿರುವ ಬಗ್ಗೆ ವಿಸ್ತೃತವಾಗಿ ದಾಖಲೆಗಳ ಸಮೇತ ದೂರು ಸಲ್ಲಿಸಿತು.

ರಾಜ್ಯದ ಆಡಳಿತ ಯಂತ್ರವನ್ನು, ಅದರಲ್ಲಿಯೂ ಮುಖ್ಯವಾಗಿ ಕೆಲ ಜಿಲ್ಲಾಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಸರ್ಕಾರ ಮತದಾರರ ಪಟ್ಟಿಯನ್ನು ಮನಸೋ ಇಚ್ಚೆ ತಿರುಚಿ ಅಕ್ರಮ ಮತಗಳು ಉಳಿದುಕೊಳ್ಳುವ ರೀತಿಯಲ್ಲಿ ಹುನ್ನಾರ ನಡೆಸುತ್ತಿದೆ ಎಂದು ಹಿರಿಯ ಸಚಿವರಿಬ್ಬರೂ ಮುಖ್ಯ ಚುನಾವಣಾ ಆಯುಕ್ತರಲ್ಲಿ ದೂರಿದರು. ನಂತರ ಸಚಿವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮುಖ್ಯ ಚುನಾವಣಾ ಆಯುಕ್ತರಿಗೆ ನೀಡಿದ ದೂರಿನ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಅತ್ಯಂತ ವಿವರವಾಗಿ ಮುಖ್ಯ ಚುನಾವಣಾ ಆಯುಕ್ತರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಈ ಬಗ್ಗೆ ತಕ್ಷಣ ಗಮನಹರಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಚುನಾವಣಾ ವ್ಯವಸ್ಥೆಯ ಶುದ್ಧೀಕರಣಕ್ಕೆ ಹೆಚ್ಚಿನ ಕ್ರಮಗಳು ಅಗತ್ಯ ಎಂಬ ನಮ್ಮ ಬೇಡಿಕೆಗೆ ಅವರು ಸ್ಪಂದಿಸಿದ್ದಾರೆ ಎಂದು ತಿಳಿಸಿದರು. ಭಾನುವಾರ ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತರಿಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ನಿಯೋಗದಿಂದ ದೂರು ಸಲ್ಲಿಸಲಾಗಿತ್ತು. ಈಗ ರಾಷ್ಟ್ರಮಟ್ಟದ ಆಯೋಗದ ಮುಂದೆ ನಮ್ಮ ಕಳವಳವನ್ನು ವ್ಯಕ್ತಪಡಿಸಿದ್ದೇವೆ. ಆಗುತ್ತಿರುವ ಲೋಪದೋಷಗಳನ್ನು ಸರಿಪಡಿಸುವ ಭರವಸೆ ನೀಡಿದ್ದಾರೆ ಎಂದು ಬೃಹತ್ ಕೈಗಾರಿಕೆ ಸಚಿವರು ಮಾಧ್ಯಮಗಳಿಗೆ ತಿಳಿಸಿದರು.

ನಮ್ಮ ಆತಂಕ ಮತ್ತು ಕಳವಳಕ್ಕೆ ಸ್ಪಂದಿಸಿ ಈಗಾಗಲೇ ಕೇಂದ್ರದ ಚುನಾವಣಾ ಆಯೋಗವು ರಾಜ್ಯಕ್ಕೆ ವೀಕ್ಷಕರನ್ನು ಕಳಿಸಿದ್ದಾರೆ. ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ಮೇಲುಸ್ತುವಾರಿ ವಹಿಸಲು ಹೊರ ರಾಜ್ಯದ ದಕ್ಷ ಅಧಿಕಾರಿಯನ್ನು ನೇಮಕ ಮಾಡಬೇಕು ಎಂದು ಕೋರಿದ್ದೇವೆ ಎಂಬುದಾಗಿ ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು. ತನ್ನ ಅದೀನದಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸುತ್ತಿರುವ ರಾಜ್ಯ ಸರ್ಕಾರವು; ಕಲ್ಯಾಣ ಮಂಟಪ ಮಸೀದಿಗಳು ಸಮುದಾಯ ಭವನಗಳು ಹಾಗೂ ತನಗೆ ಬೇಕಾದ ಜಾಗಗಳಲ್ಲಿ ಜನರನ್ನು ಗುಂಪು ಗುಂಪಾಗಿ ಸೇರಿಸಿಕೊಂಡು ತನಗೆ ಬೇಕಾದ ಹಾಗೆ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡಿಕೊಳ್ಳುತ್ತಿದೆ.

ಕಳೆದ ಏಳು ದಿನಗಳಿಂದ ಆಗಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಗಂಭೀರ ಲೋಪದೋಷಗಳು ಆಗಿವೆ. ಇದೆಲ್ಲವನ್ನು ಸರಿಪಡಿಸುವ ಉದ್ದೇಶದಿಂದ ಈವರೆಗಿನ ಎಲ್ಲಾ ಪ್ರಕ್ರಿಯೆಗಳನ್ನು ಕೈಬಿಡಬೇಕು ಎಂದು ಮುಖ್ಯ ಚುನಾವಣೆ ಆಯುಕ್ತರನ್ನು ವಿನಂತಿಸಿದ್ದೇವೆ ಎಂದು ಸಚಿವ ಕುಮಾರಸ್ವಾಮಿ ಅವರು ತಿಳಿಸಿದರು. ಕಾಂಗ್ರೆಸ್ ನಾಯಕರು ಜನರಿಗೆ ಗಾಬರಿಗೆ ಹುಟ್ಟುಸುವ ಕೆಲಸ ಮಾಡಿದ್ದಾರೆ. ಎಲ್ಲೆಲ್ಲಿ ಯಾವ ಯಾವ ಬಗೆಯಲ್ಲಿ ಸರ್ಕಾರ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಅಕ್ರಮ ಎಸಗಿದೆ ಎಂಬ ಬಗ್ಗೆ ದಾಖಲೆಗಳ ಸಮೇತ ದೂರು ಕೊಟ್ಟಿದ್ದೇವೆ. ಚುನಾವಣಾ ಆಯೋಗ ರೂಪಿಸಿರುವ ಮಾರ್ಗಸೂಚಿಯನ್ನು ಹೇಗೆಲ್ಲಾ ಹಾಳು ಮಾಡುತ್ತಿದೆ ಎಂಬ ವಿವರಗಳನ್ನು ಮುಖ್ಯ ಆಯುಕ್ತರಿಗೆ ಸಲ್ಲಿಸಲಾಯಿತು ಎಂದು ಸಚಿವರು ಮಾಹಿತಿ ನೀಡಿದರು.

ನಮ್ಮ ದೂರಿನ ಬಗ್ಗೆ ಮುಖ್ಯ ಆಯುಕ್ತರು ಕೂಲಂಕಷವಾಗಿ ಪರಿಶೀಲನೆ ಮಾಡುವ ಭರವಸೆ ನೀಡಿದ್ದಾರೆ. ಈಗಾಗಲೇ ಇಬ್ಬರು ವೀಕ್ಷರನ್ನು ರಾಜ್ಯಕ್ಕೆ ನೇಮಿಸಲಾಗಿದೆ. ರಾಜ್ಯ ಸರ್ಕಾರ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂಬುದನ್ನು ಅವರಿಗೆ ಮಾಡಿಕೊಟ್ಟಿದ್ದೇವೆ. ನಕಲಿ ಮತಗಳನ್ನು ಸೃಷ್ಟಿಪಡಿಸಲು ಪ್ರಯತ್ನಿಸುತ್ತಿದ್ದಾರೆ, ಜನರನ್ನು ಅನಗತ್ಯ ಗಾಬರಿಪಡಿಸಲಾಗುತ್ತಿದೆ. ಗ್ಯಾರಂಟಿ ಕಡಿತಗೊಳ್ಳುವ ಭಯ ಹುಟ್ಟಿಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ನ್ಯಾಯಯುತವಾಗಿ ಎಸ್‌ಐಆರ್ ನಡೆಯಬೇಕು ಎಂದು ಒತ್ತಾಯಿಸಿದ್ದೇವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರದ ಕೆಲ ಮಂತ್ರಿಗಳೇ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ನಗರ ಒಂದರಲ್ಲಿಯೇ 25 ಲಕ್ಷಕ್ಕೂ ಹೆಚ್ಚು ಬಾಂಗ್ಲಾ ದೇಶದ ಪ್ರಜೆಗಳು ಅಕ್ರಮವಾಗಿ ಇದ್ದಾರೆ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಹೀಗಿದ್ದರೂ ಕಾಂಗ್ರೆಸ್ ನಾಟಕ ಆಡುತ್ತಿದೆ. ಬಾಂಗ್ಲಾ ಪ್ರಜೆಗಳು ನಕಲಿ ಆಧಾರ್ ಕಾರ್ಡ್, ವೋಟರ್ ಐಡಿ ಪಡೆದುಕೊಂಡಿದ್ದಾರೆ. ಅವರನ್ನು ಕಂಡು ಹಿಡಿದು ಮತದಾರರ ಪಟ್ಟಿಯಿಂದ ಕಿತ್ತು ಹಾಕಬೇಕು ಎಂಬುದು ಎನ್ಡಿಎ ಒತ್ತಾಯವಾಗಿದೆ ಎಂದು ಸಚಿವರು ಒತ್ತಿ ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಕೇಂದ್ರದ ಪ್ರಹ್ಲಾದ್ ಜೋಶಿ ಅವರು ಸುದ್ದಿಗಾರರ ಜೊತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಕೇಂದ್ರ ಸಚಿವರಾದ ವಿ.ಸೋಮಣ್ಣ, ವಿಧಾನಸಭೆ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರದ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಜೆಡಿಎಸ್ ನಾಯಕ ಸಿ.ಬಿ. ಸುರೇಶ್ ಬಾಬು, ಸಂಸದರಾದ ಎಂ.ಮಲ್ಲೇಶ್ ಬಾಬು, ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ಶಾಸಕ ಅರವಿಂದ್ ಬೆಲ್ಲದ ಮುಂತಾದವರು ನಿಯೋಗದಲ್ಲಿ ಇದ್ದರು. ಇದನ್ನೂ ಓದಿ : ನಟ ಕಮಲ್ ಹಾಸನ್ ಕನ್ನಡ ಹೇಳಿಕೆ ವಿವಾದ; ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕೇಸ್ ವರ್ಗಾವಣೆ..!

Related posts

ಹಂಪಿಯ ವಿರೂಪಾಕ್ಷ ದೇಗುಲದ ‘ಲಕ್ಷ್ಮೀ’ ಕೊನೆಗೂ ಕೋಲಾರಕ್ಕೆ ಸ್ಥಳಾಂತರ..!

Kalpana Editor

ಮತ್ತಷ್ಟು ಯಶಸ್ಸು ನಿಮ್ಮದಾಗಲಿ; ಡಿಕೆ ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭ ಹಾರೈಕೆ..!

Kalpana Editor

ಆಲೂಗಡ್ಡೆಯಲ್ಲಿ ಆರೋಗ್ಯದ ರಹಸ್ಯ ಮತ್ತು ಆಯುರ್ವೇದದ ಮಹಿಮೆ..!

Kalpana Editor