July 11, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಹೆಚ್‌ಡಿಕೆ ಜೊತೆಗೆ ಚರ್ಚೆ, ಉಪ ಚುನಾವಣೆ ಗೆಲುವಿಗೆ ಕಾರ್ಯತಂತ್ರ ಸರ್ಕಾರ ಕಿತ್ತೊಗೆಯಲು ಸಮನ್ವಯದಿಂದ ಕೆಲಸ – ಬಿ.ವೈ.ವಿಜಯೇಂದ್ರ

ಬೆಂಗಳೂರು : ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಲು ಜೆಡಿಎಸ್ ಜೊತೆಗೆ ಸಮನ್ವಯದಿಂದ, ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ. ಇಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಕುರಿತು ಚರ್ಚಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಬರುವ ಹಿರಿಯೂರು ಹಾಗೂ ಧಾರವಾಡ ಉಪ ಚುನಾವಣೆ ಹಾಗೂ ನಾಲ್ಕು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.

ಬಿಜೆಪಿ ಮೂರು ಕಡೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಎಲ್ಲದಕ್ಕೂ ಜೆಡಿಎಸ್ ಸಹಕಾರ ಕೇಳಿದ್ದೇನೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ಸಮನ್ವಯ ಸಮಿತಿ ರಚಿಸುವ ಕುರಿತು ಮಾತುಕತೆ ನಡೆಸಲಾಗಿದೆ. ಸಮಿತಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಇರಲಿದ್ದಾರೆ. ಜೆಡಿಎಸ್‍ನಿಂದ ಕುಮಾರಸ್ವಾಮಿ ಇರಲಿದ್ದಾರೆ. ಇದರ ಜೊತೆಗೆ ಮತ್ತೊಬ್ಬರ ಹೆಸರು ಸೂಚಿಸಿ ಎಂದು ಹೇಳಿರುವುದಾಗಿ ತಿಳಿಸಿದರು. ನಮ್ಮ ಎಲ್ಲಾ ಮಾತಿಗೆ ಕುಮಾರಸ್ವಾಮಿ ಅವರು ಸಹಮತ ವ್ಯಕ್ತಪಡಿಸಿದ್ದಾರೆ. ಸಮಿತಿಯಲ್ಲಿ ಆದಷ್ಟು ಕಡಿಮೆ ಇರಬೇಕು ಎಂದು ಹೇಳಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗ್ರವಾಲ್ ಅವರೊಂದಿಗೂ ಚರ್ಚಿಸಲಾಗಿದೆ ಎಂದರು.

ಅಭಿವೃದ್ಧಿಯ ಹಿತದೃಷ್ಟಿಯಿಂದ ತೀರ್ಮಾನ – ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಹಾಗೂ ರಾಜ್ಯದ ಅಭಿವೃದ್ಧಿಯ ಹಿತದೃಷ್ಟಿಯಿಂದ ತೀರ್ಮಾನ ಕೈಗೊಂಡಿದ್ದೇವೆ. ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅಪೇಕ್ಷೆಯಂತೆ ನಾವೆಲ್ಲ ಒಂದಾಗಿ ಹೋಗಬೇಕು ಎಂದು ತಿಳಿಸಿದರು.

ಗೊಂದಲಕ್ಕೆ ಅವಕಾಶ ಇಲ್ಲ – ಹಿರಿಯೂರು ಕ್ಷೇತ್ರದ ಉಪ ಚುನಾವಣೆ ಸಂಬಂಧ ಕುಮಾರಸ್ವಾಮಿ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ನಮ್ಮ ಅಭಿಪ್ರಾಯವನ್ನೂ ಹೇಳಿದ್ದೇವೆ. ಕ್ಷೇತ್ರದಲ್ಲಿ ಹಿಂದೆ ಬಿಜೆಪಿ ಗೆಲುವು ಸಾಧಿಸಿದೆ. ಹಿರಿಯೂರು ಮತ್ತು ಧಾರವಾಡ ಉಪ ಚುನಾವಣೆಯಲ್ಲಿ ಗೊಂದಲಕ್ಕೆ ಅವಕಾಶ ನೀಡದೆ ಗೆಲುವಿಗೆ ಕೆಲಸ ಮಾಡುತ್ತೇವೆ. ಹಿಂದೆ ಆದ ತಪ್ಪು ತಿದ್ದಿಕೊಂಡು ಹೋಗಬೇಕು. ಎರಡೂ ಕಡೆ ನಾವು ಗೆಲ್ಲಬೇಕು ಎಂದು ಹೇಳಿದರು. ಕ್ಷೇತ್ರದಲ್ಲಿ ಯಾರು ಸ್ಪರ್ಧಿಸಬೇಕು ಎಂಬ ಬಗ್ಗೆ ತೀರ್ಮಾನವನ್ನು ಹೈಕಮಾಂಡ್ ಕೈಗೊಳ್ಳಲಿದೆ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.

ಜಿಬಿಎ ಚುನಾವಣೆ ನಡೆಸುವ ಮನಸ್ಸಿಲ್ಲ – ರಾಜ್ಯ ಸರ್ಕಾರಕ್ಕೆ ಜಿಬಿಎ, ಜಿಲ್ಲಾ ಪಂಚಾಯಿತಿ ಸೇರಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುವ ಮನಸ್ಸಿಲ್ಲ. ರಾಜ್ಯ ಸರ್ಕಾರ ಈಗ ಎಸ್‍ಐಆರ್ ಇಟ್ಟುಕೊಂಡು ಮತ್ತೆ ಜಿಬಿಎ ಚುನಾವಣೆ ಮುಂದೂಡಲು ನೋಡುತ್ತಿದೆ. ಇದು ದುರ್ದೈವ. ಸಚಿವ ಸಂಪುಟ ವಿಸ್ತರಣೆ ಮಾಡುವ ಮಾನಸಿಕ ಸ್ಥಿತಿಯಲ್ಲೂ ಸರ್ಕಾರ ಇಲ್ಲ ಎಂದು ಆಕ್ಷೇಪಿಸಿದರು.

ಬೀದಿಬದಿ ವ್ಯಾಪಾರಿಗಳ ಬಗ್ಗೆ ಚರ್ಚೆ – ಬೀದಿಬದಿ ವ್ಯಾಪಾರಿಗಳು ಅರ್ಥಿಕ ಶಕ್ತಿ ತುಂಬುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ಬಡವರಾದ ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ ಎತ್ತಂಗಡಿ ಮಾಡುವ ಬದಲು ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಅವರ ಹಿತಾಸಕ್ತಿ ಕಾಪಾಡುವ ಜವಾಬ್ದಾರಿ ಸಹ ಸರ್ಕಾರದ ಮೇಲಿದೆ ಎಂದು ನುಡಿದರು.

ಕಡತ ವಿಲೇವಾರಿ ಆಗಿಲ್ಲ – ಎಂಬತ್ತು ಸಾವಿರ ಕಡತ ವಿಲೇವಾರಿ ಆಗಿಲ್ಲ ಎಂದರೆ ರಾಜ್ಯದ ಆಡಳಿತ ಸ್ಥಿತಿ ಏನಾಗಿದೆ ಎಂದು ತಿಳಿಯುತ್ತದೆ. ಸಿಎಂ ಉತ್ಸಾಹದಿಂದ ಇದ್ದಾರೆ. ಒಂದು ತಿಂಗಳು ಪೂರೈಸಿದ್ದಾರೆ. ಈಗಲಾದರೂ ಮೂರು ವರ್ಷದ ವೈಫಲ್ಯಗಳನ್ನು ಸರಿಪಡಿಸಿಕೊಳ್ಳಲಿ. ಅನ್ನದಾತರ ಕಲ್ಯಾಣಕ್ಕೆ ಆಡಳಿತ ನಡೆಸಲಿ ಎಂದರು.

ಕುತಂತ್ರ, ಷಡ್ಯಂತ್ರ ನಡೆಯುತ್ತಿದೆ – ಅಕ್ರಮ ವಲಸಿಗರಿಗೆ ರಕ್ಷಣೆ ನೀಡಲು ಶಾಶ್ವತ ನಿವಾಸಿ ಪ್ರಮಾಣಪತ್ರ ನೀಡುವ ಮೂಲಕ ಷಡ್ಯಂತ್ರ ನಡೆಯುತ್ತಿದೆ. ಅಲ್ಪಸಂಖ್ಯಾತರ ಓಲೈಕೆ ಮತ್ತು ದೇಶದ ಹಿತಕ್ಕೆ ಧಕ್ಕೆ ತರುವ ನಿರ್ಧಾರ ಕೈಬಿಡಿ ಎಂದು ಸಿಎಂಗೆ ಆಗ್ರಹಿಸಿದರು. ಇಂಥ ಪ್ರಮಾಣಪತ್ರಕ್ಕೆ ಬಿಜೆಪಿ ವಿರೋಧವಿದೆ. ಮುಂದಿನ ದಿನಗಳಲ್ಲಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ : ಮಂಗಳೂರಿನಲ್ಲಿ ತೈಲ ಸಂಗ್ರಹಾಗಾರ ಸ್ಥಾಪನೆಗೆ ONGC ಅನುಮೋದನೆ..!

Related posts

ಮಹಿಳೆಯರ ಮೇಲೆ ಕಾಲಿಂದ ನೀರು ಎರಚುತ್ತಾರೆ, ಗೂಂಡಾಗಿರಿ ಮಾಡ್ತಿದ್ದಾರೆ: ಕನ್ನಡಿಗರ ಆಕ್ರೋಶ..!

Kalpana Editor

ಶತಾವಧಾನಿ ಗಣೇಶ್, ಅಂಕೇಗೌಡ ಸೇರಿ 66 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಧಾನ..!

Kalpana Editor

ಡಿಕೆಶಿ ಪಟ್ಟಾಭಿಷೇಕಕ್ಕೆ ರಾಮನಗರದಿಂದ 40 ರಿಂದ 50 ಸಾವಿರ ಜನ..!

Kalpana Editor