ಬಾಗಲಕೋಟೆ : ಬೀಳಗಿ ತಾಲೂಕಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತರರಾಜ್ಯ ಶ್ರೀಗಂಧ ಕಳ್ಳರ ಜಾಲವನ್ನು ಮಟ್ಟಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಮಾರಾಟಕ್ಕಾಗಿ ಅಕ್ರಮವಾಗಿ ಕತ್ತರಿಸಿ ಸಂಗ್ರಹಿಸಿಡಲಾಗಿದ್ದ ಬರೋಬ್ಬರಿ 450 ಕೆಜಿ ಶ್ರೀಗಂಧದ ಕಟ್ಟಿಗೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಪ್ರಸಿದ್ಧ ಯಡಹಳ್ಳಿಯ ಚಿಂಕಾರ ವನ್ಯಜೀವಿ ಧಾಮದ ಅರಣ್ಯ ಪ್ರದೇಶ ಹಾಗೂ ಅಮಲಝರಿ ಗ್ರಾಮದ ವ್ಯಾಪ್ತಿಯಲ್ಲಿ ಈ ಜಂಟಿ ದಾಳಿ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಪ್ರವೃತ್ತರಾದ ಅರಣ್ಯ ಸಿಬ್ಬಂದಿ, ಶ್ರೀಗಂಧದ ಮರಗಳನ್ನು ಕತ್ತರಿಸಿ ಅಕ್ರಮ ಮಾರಾಟಕ್ಕೆ ಸಂಚು ರೂಪಿಸಿದ್ದ ಕಳ್ಳರ ಅಡಗುತಾಣದ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಮೂಲದವರೆಂದು ತಿಳಿದುಬಂದಿದ್ದು, ಅಂತರರಾಜ್ಯ ಮಟ್ಟದಲ್ಲಿ ಶ್ರೀಗಂಧದ ಕಳ್ಳಸಾಗಣೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದರು. ಸ್ಥಳೀಯವಾಗಿ ಶ್ರೀಗಂಧದ ಮರಗಳನ್ನು ಕರಗಿಸಿ ಸಾಗಿಸಲು ಇವರು ಯೋಜನೆ ರೂಪಿಸಿದ್ದರು ಎನ್ನಲಾಗಿದೆ.
ಬಾಗಲಕೋಟೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರದೀಪ ರಾಠೋಡ ಅವರ ಸಮರ್ಥ ನೇತೃತ್ವದಲ್ಲಿ ಈ ಯಶಸ್ವಿ ದಾಳಿ ನಡೆದಿದೆ. ಕಾರ್ಯಾಚರಣೆಯಲ್ಲಿ ಬೀಳಗಿ ವಲಯ ಅರಣ್ಯಾಧಿಕಾರಿ ಅಮೃತ ಗಂಡೋಸಿ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಆರೋಪಿಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದನ್ನೂ ಓದಿ : ಮಾಜಿ ಶಾಸಕ, ಜಾಫರ್ ಶರೀಫ್ ಅಳಿಯ ಸೈಯದ್ ಯಾಸಿನ್ ನಿಧನ..!
