ಬೆಂಗಳೂರು : ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಸರ್ಕಾರದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದರು. ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆಗಳಿಗೆ ಶಾಶ್ವತ ನಿವಾಸ ಪ್ರಮಾಣಪತ್ರ, ರೇಷನ್ ಕಾರ್ಡ್ ಹಾಗೂ ಮನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಈ ಕುರಿತು ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.
ಎಸ್ಐಆರ್ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಂತಹ ಪ್ರಮಾಣಪತ್ರಗಳನ್ನು ನೀಡುವುದು ಅಕ್ರಮವಾಗಿದ್ದು, ಮುಂದಿನ ದಿನಗಳಲ್ಲಿ ದೇಶದ ಕಾನೂನು ಮತ್ತು ಭದ್ರತೆಗೆ ಅಪಾಯವಾಗಬಹುದು ಎಂದು ಎಚ್ಚರಿಸಿದರು. ಪಿಎಫ್ಐ ಹಾಗೂ ಕೆಎಫ್ಡಿ ಚಟುವಟಿಕೆಗಳ ಬಗ್ಗೆ ಉಲ್ಲೇಖಿಸಿದ ಅಶೋಕ್, ಅಕ್ರಮ ವಲಸಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬದಲು ಅವರಿಗೆ ದಾಖಲೆಗಳನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಇನ್ನು ಕಾಲ್ತುಳಿತ ಪ್ರಕರಣದ ಕುರಿತು ಮಾತನಾಡಿದ ಅವರು, 11 ಮಂದಿ ಮೃತಪಟ್ಟಿದ್ದರೂ ಕೇವಲ ಅಧಿಕಾರಿಗಳ ಮೇಲೆ ಮಾತ್ರ ಹೊಣೆ ಹೊರಿಸಲಾಗಿದೆ ಎಂದು ಟೀಕಿಸಿದರು. ವೇದಿಕೆಯಲ್ಲಿದ್ದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲಾಗುವುದು ಎಂದು ಘೋಷಿಸಿದರು.
ಬರ ಪರಿಸ್ಥಿತಿ ಕುರಿತು ಪ್ರಧಾನಿ ಅವರಿಗೆ ಪತ್ರ ಬರೆದಿರುವ ಸರ್ಕಾರವನ್ನು ಟೀಕಿಸಿದ ಅಶೋಕ್, ಮೊದಲು ರಾಜ್ಯದಲ್ಲಿ ಅಧಿಕೃತವಾಗಿ ಬರ ಘೋಷಣೆ ಮಾಡಬೇಕು. ಎನ್ಡಿಆರ್ಎಫ್ ನೆರವು ಪಡೆಯಲು ಅಗತ್ಯ ಕ್ರಮಗಳನ್ನು ಸರ್ಕಾರ ಕೈಗೊಂಡಿಲ್ಲ. ಕುಡಿಯುವ ನೀರು ಮತ್ತು ಮೇವು ಸಮಸ್ಯೆ ಇದ್ದರೂ ಸರ್ಕಾರ ಬರ ಘೋಷಣೆ ಮಾಡದೆ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರ ವೇತನ ಹಾಗೂ ಮನೆ ನವೀಕರಣ ವೆಚ್ಚದ ಬಗ್ಗೆ ಮಾಹಿತಿ ನೀಡದಿರುವುದನ್ನೂ ಪ್ರಶ್ನಿಸಿದ ಅವರು, ಈ ಕುರಿತು ಒಂದು ತಿಂಗಳ ಹಿಂದೆಯೇ ಮಾಹಿತಿ ಕೇಳಿದ್ದರೂ ಸರ್ಕಾರ ಉತ್ತರ ನೀಡಿಲ್ಲ. ಮಾಹಿತಿ ಮುಚ್ಚಿಡುವ ಪ್ರಯತ್ನ ನಡೆಯುತ್ತಿದ್ದು, ಸಾರ್ವಜನಿಕ ಹಣದ ದುರುಪಯೋಗ ನಡೆದಿದೆ ಎಂದು ಆರೋಪಿಸಿದರು. ಇದನ್ನೂ ಓದಿ : ರಾಮಭಕ್ತರ ಮೇಲೆ ಗುಂಡು ಹಾರಿಸಿದರಿಂದ ಇಂದು ಉಪದೇಶ; ಎಸ್ಪಿ ವಿರುದ್ಧ ಯೋಗಿ ಕಿಡಿ..!
