July 24, 2026
kranthikidi.com
ತಾಜಾಸುದ್ದಿರಾಜ್ಯ

ಇನ್ಮುಂದೆ 15 ನಿಮಿಷದಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಆ್ಯಂಬುಲೆನ್ಸ್…!

ಬೆಂಗಳೂರು : ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಜೀವದಾತನಾಗಿರುವ 108 ಆ್ಯಂಬುಲೆನ್ಸ್ ಸೇವೆಗೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಇಲಾಖೆಯು ದೇಶದಲ್ಲೇ ಅತ್ಯಂತ ನಾವೀನ್ಯ ಹಾಗೂ ಕಟ್ಟುನಿಟ್ಟಾದ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಇನ್ಮುಂದೆ ಕರೆ ಮಾಡಿದ ಕೇವಲ 15 ನಿಮಿಷಗಳ ಒಳಗೆ ಆ್ಯಂಬುಲೆನ್ಸ್ ರೋಗಿಯಿರುವ ಸ್ಥಳಕ್ಕೆ ತಲುಪದಿದ್ದರೆ, ಸಂಬಂಧಪಟ್ಟ ಚಾಲಕರಿಗೆ ಅಥವಾ ಏಜೆನ್ಸಿಗೆ 5,000 ರೂಪಾಯಿ ಭಾರಿ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಈ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ತುರ್ತು ವೈದ್ಯಕೀಯ ಸೇವೆಯಲ್ಲಿ ಇನ್ಮುಂದೆ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಈ ನಿಯಮ ಅನ್ವಯವಾಗಲಿದ್ದು ಈ ಬಗ್ಗೆ ಪ್ರಮುಖ ಎಚ್ಚರಿಕೆಗಳನ್ನು ನೀಡಿದೆ.

ಆ್ಯಂಬುಲೆನ್ಸ್ ಸಿಬ್ಬಂದಿಗೆ ರೋಗಿಯಿರುವ ಸ್ಥಳವನ್ನು ತಲುಪಲು 13 ರಿಂದ ಗರಿಷ್ಠ 15 ನಿಮಿಷಗಳ ಕಾಲಮಿತಿಯನ್ನು ನಿಗದಿಪಡಿಸಲಾಗಿದೆ. ನಿಗದಿತ ಸಮಯ ಮೀರಿದರೆ 5,000 ರೂಪಾಯಿ ದಂಡ ವಿಧಿಸಲಾಗುತ್ತದೆ. ಚಾಲಕರ ವಿಳಂಬ ಧೋರಣೆಗೆ ಅವರನ್ನು ನಿಯೋಜಿಸಿರುವ ಆ್ಯಂಬುಲೆನ್ಸ್ ಏಜೆನ್ಸಿಯೇ ಸಂಪೂರ್ಣ ಹೊಣೆಯಾಗಬೇಕಾಗುತ್ತದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಇನ್ನು ನಗರ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ನೆಪವೊಡ್ಡಿ ಅನಗತ್ಯ ವಿಳಂಬ ಮಾಡಲು ಇನ್ಮುಂದೆ ಅವಕಾಶವಿಲ್ಲ. ಸಮಯ ಪಾಲನೆ ಮಾಡುವುದು ಚಾಲಕರು ಹಾಗೂ ಸೇವಾ ಸಂಸ್ಥೆಗಳಿಗೆ ಕಡ್ಡಾಯವಾಗಿದೆ.

ಸಮಯಕ್ಕೆ ಸರಿಯಾಗಿ ಸೇವೆ ಒದಗಿಸಲು ಮತ್ತು ತಾಂತ್ರಿಕ ಅಡಚಣೆಗಳನ್ನು ನಿವಾರಿಸಲು ಸರ್ಕಾರ ಮೂಲಸೌಕರ್ಯ ಬದಲಾವಣೆಗೆ ಮುಂದಾಗಿದೆ. ಪದೇ ಪದೇ ಕೈಕೊಡುವ ಹಾಗೂ ರಸ್ತೆಯಲ್ಲಿ ನಿಧಾನವಾಗಿ ಸಾಗುವ ಹಳೆಯ ಎಲ್ಲಾ 108 ಆ್ಯಂಬುಲೆನ್ಸ್ ವಾಹನಗಳನ್ನು ತಕ್ಷಣವೇ ಗುಜರಿಗೆ ಹಾಕುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಹಳೆಯ ವಾಹನಗಳ ಜಾಗಕ್ಕೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಹೊಸ ಆ್ಯಂಬುಲೆನ್ಸ್‌ಗಳನ್ನು ಖರೀದಿಸಲು ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. “ತುರ್ತು ವೈದ್ಯಕೀಯ ಸೇವೆ ಎನ್ನುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಅದರಲ್ಲಿ ನಿಮಿಷಗಳ ವಿಳಂಬವೂ ಕೂಡ ಒಂದು ಜೀವಕ್ಕೆ ಕಂಟಕ ತರಬಹುದು. ಹೀಗಾಗಿ ಆ್ಯಂಬುಲೆನ್ಸ್ ಸೇವೆ ಮತ್ತಷ್ಟು ಪರಿಣಾಮಕಾರಿಯಾಗಿಸಲು ಈ ನಿಯಮ ತರಲಾಗಿದೆ. ನಿಗದಿತ ಸಮಯದಲ್ಲಿ ರೋಗಿಯನ್ನು ಆಸ್ಪತ್ರೆಗೆ ತಲುಪಿಸುವುದು ನಮ್ಮ ಆದ್ಯತೆ. ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು,” ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಎಚ್ಚರಿಸಿದ್ದಾರೆ. ಇದನ್ನೂ ಓದಿ : ಬಾಂಗ್ಲಾದೇಶೀಯರಿಗೆ ದಾಖಲೆ ನೀಡುತ್ತಿರುವ ಆರೋಪ, ಕಾಲ್ತುಳಿತ ಪ್ರಕರಣಕ್ಕೆ ಸಿಬಿಐ ತನಿಖೆ ಆಗ್ರಹ; ಆರ್‌.ಅಶೋಕ್

Related posts

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಭೇಟಿ..!

Kalpana Editor

ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ: ಪಶ್ಚಿಮ ಪಾಲಿಕೆ ವ್ಯಾಪ್ತಿಯಲ್ಲಿ ಇಂದು ಪ್ರಗತಿ..!

Kalpana Editor

‘ಸಮಂತಾ ತಾಯಿ ಆಗುತ್ತಿರುವುದು ನಿಜ’ ಕೊನೆಗೂ ಗುಡ್ ನ್ಯೂಸ್..!

Kalpana Editor