ಹಾಸನ : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭವಾಗಿದೆ. ಹೊಳೆನರಸೀಪುರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಯುತ್ತಿದ್ದು, ತಾಲೂಕಿನ ಪ್ರಮುಖ ಗ್ರಾಮಗಳಲ್ಲಿ ಅಂತಿಮ ಯಾತ್ರೆ ನಡೆಯಲಿದೆ. ಹೊಳೆನರಸೀಪುರದಿಂದ ನಾಗಲಾಪುರ, ಹುಚ್ಚನಕೊಪ್ಪಲು, ಸಂಕನಹಳ್ಳಿ, ಕಳ್ಳಿಕೊಪ್ಪಲು, ಕಟ್ಟಹಳ್ಳಿ ಬಾರೆ, ಮಾರಗೊಡನಹಳ್ಳಿ, ಪಡುವಲಹಿಪ್ಪೆ, ಹನುಮನಹಳ್ಳಿ, ಬಸವನಾಯಕನಹಳ್ಳಿ, ಹಂಗರಹಳ್ಳಿ, ಹಳೇಕೋಟೆ ಗ್ರಾಮಗಳಲ್ಲಿ ಅಂತಿಮ ಯಾತ್ರೆ ನಡೆಯಲಿದೆ.
ಮಲ್ಲಿಗೆ ಹೂ, ತುಳಸಿ ಮಾಲೆಯಿಂದ ಮುಕ್ತಿವಾಹನವನ್ನು ಅಲಂಕರಿಸಲಾಗಿದೆ. ರಸ್ತೆಯುದ್ದಕ್ಕೂ ಸಾರ್ವಜನಿಕರು ಅಂತಿಮ ದರ್ಶನಕ್ಕೆ ಕಾದು ನಿಂತಿದ್ದಾರೆ. ಮಧ್ಯಾಹ್ನ 3 ಗಂಟೆ ವೇಳೆಗೆ ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಪಾರ್ಥಿವ ಶರೀರ ತಲುಪಲಿದೆ. 45 ನಿಮಿಷಗಳ ಕಾಲ ಹರದನಹಳ್ಳಿಯಲ್ಲಿ ಪೂಜೆ ನಡೆಯಲಿದ್ದು, 4 ಗಂಟೆ ವೇಳೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ.
ಬೆಂಗಳೂರು ಜೆಪಿ ನಗರದ ಶ್ರೀ ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಕಣ್ಣನ್ ಸ್ವಾಮೀಜಿ ನೇತೃತ್ವದಲ್ಲಿ ಅಂತ್ಯ ಸಂಸ್ಕಾರದ ವಿಧಿ ವಿಧಾನ ನಡೆಯಲಿದೆ. ಕಣ್ಣನ್ ಸ್ವಾಮೀಜಿ ಜೊತೆ 15ಕ್ಕೂ ಹೆಚ್ಚು ಅರ್ಚಕರು ಭಾಗವಹಿಸಲಿದ್ದಾರೆ. ವಾಸ್ತು ಪ್ರಕಾರ ಈಶಾನ್ಯ ದಿಕ್ಕು ಖಾಲಿ ಇರಿಸಿಕೊಂಡು ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ. ಇದನ್ನೂ ಓದಿ : ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ; ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ..!
