ಬೆಳಗಾವಿ : ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಬೆಳಗಾವಿ ತಾಲ್ಲೂಕಿನ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರಿಂದ ಬೆಳಗಾವಿ ಮಹಾನಗರದ ಜನರು ನಿಟ್ಟುಸಿರು ಬಿಡುವಂತಾಗಿದ್ದು, ಮುಂದಿನ 1 ವರ್ಷದವರೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇಲ್ಲ ಎಂಬ ವಿಶ್ವಾಸ ಮೂಡಿದೆ.
ಮಾರ್ಕಂಡೇಯ ನದಿಗೆ ಅಡ್ಡಲಾಗಿ ನಿರ್ಮಿಸಲಾದ ರಕ್ಕಸಕೊಪ್ಪ ಜಲಾಶಯವು ಸುಮಾರು ಅರ್ಧ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಜಲಾಶಯ ಭರ್ತಿಯಾಗಿರುವುದರಿಂದ ಬೆಳಗಾವಿ ನಗರಕ್ಕೆ ನಿರಂತರವಾಗಿ ಕುಡಿಯುವ ನೀರು ಪೂರೈಸಲು ಅನುಕೂಲಕರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವರ್ಷ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿರುವುದು ಜಲಾಶಯ ಭರ್ತಿಗೆ ಪ್ರಮುಖ ಕಾರಣವಾಗಿದೆ.
ಕಳೆದ ವರ್ಷ ಜೂನ್ ಮೂರನೇ ವಾರದಲ್ಲೇ ಜಲಾಶಯ ಭರ್ತಿಯಾಗಿದ್ದರೆ, ಈ ಬಾರಿ ಮಳೆ ಕೊರತೆಯಿಂದ ಭರ್ತಿಯಾಗುವಿಕೆ ಸ್ವಲ್ಪ ತಡವಾಗಿದೆ. ವಾಡಿಕೆಗಿಂತಲೂ ಮಳೆ ಕಡಿಮೆ ಆಗಿದ್ದರಿಂದ ಬೆಳಗಾವಿ ನಗರಕ್ಕೆ ಕುರಿತುವ ನೀರಿನ ಕೊರತೆ ಉಂಟಾಗುವ ಆತಂಕ ಎದುರಾಗಿತ್ತು. ಸದ್ಯ ರಕ್ಕಸಕೊಪ್ಪ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆ ಜನರಿಗೆ ಕುಡಿಯುವ ನೀರಿನ ಕೊರತೆ ಆತಂಕ ದೂರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ : ಬ್ರಾಹ್ಮಿ ಮುಹೂರ್ತದಲ್ಲಿ ʻರಾಮಾಯಣʼ ಟ್ರೈಲರ್ ರಿಲೀಸ್ – ರಾವಣನಾಗಿ ಅಬ್ಬರಿಸಿದ ನಟ ಯಶ್
