ಬಾಗಲಕೋಟೆ : ಹಾನೂರಿನಲ್ಲಿ ಶೂಟೌಟ್ ನಡೆದಿರುವುದು ಖಂಡನೀಯ. ಬೇಟೆಗೆ ಬಂದವರು ವೀರಪ್ಪನ್ ಮಟ್ಟದವರೇನು? ಅವರನ್ನು ಬಂಧಿಸಬಹುದಿತ್ತು. ಅಗತ್ಯವಿದ್ದರೆ ಕಾಲಿಗೆ ಗುಂಡು ಹಾರಿಸಿ ಹಿಡಿಯಬಹುದಿತ್ತು ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಗುಂಡಿನ ದಾಳಿ ಪ್ರಕರಣದ ಕುರಿತು ಗುಳೇದಗುಡ್ಡ ಪಟ್ಟಣದಲ್ಲಿ ಮಾತನಾಡಿದ ಅವರು, ಒಂದೇ ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಆಸ್ಪತ್ರೆ ಸೇರಿರುವುದು ಗಂಭೀರ ವಿಚಾರ ಎಂದರು.
ಅರಣ್ಯ ಇಲಾಖೆ ಸಿಬ್ಬಂದಿ ತಮ್ಮ ಮೇಲೆ ಗುಂಡು ಹಾರಿಸಲಾಯಿತು ಎಂದು ಹೇಳುತ್ತಿದ್ದಾರೆ. ಆದರೆ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎನ್ನುವುದಾದರೆ ಘಟನೆ ಕುರಿತು ಹಲವು ಪ್ರಶ್ನೆಗಳು ಉದ್ಭವಿಸುತ್ತವೆ. ಘಟನೆಯ ಸಂಪೂರ್ಣ ಸತ್ಯಾಂಶ ತನಿಖೆಯಿಂದ ಹೊರಬರಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯ ಸರ್ಕಾರ ಆರ್ಎಸ್ಎಸ್ಗೆ ಸಂಬಂಧಿಸಿದ ಮಸೂದೆ ಕುರಿತು ಚರ್ಚೆ ನಡೆಸುವ ಮೊದಲು ರಾಜ್ಯದ ಜನರ ಸಮಸ್ಯೆಗಳತ್ತ ಗಮನಹರಿಸಬೇಕು. ಕಲಬುರಗಿ, ಯಾದಗಿರಿ, ರಾಯಚೂರು ಭಾಗಗಳಲ್ಲಿ ಮಳೆ ಕೊರತೆಯಿಂದ ಜನರು ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಬರ ಪರಿಸ್ಥಿತಿ ಪರಿಶೀಲನೆಗೆ ಸಚಿವರನ್ನು ಕಳುಹಿಸಿದರೆ ಹೊಲದಲ್ಲಿ ನಿಂತು ಫೋಟೋ ತೆಗೆಸಿಕೊಳ್ಳುವುದಷ್ಟೇ ಆಗಬಾರದು ಎಂದರು.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ಒಂದು ಜಿಲ್ಲೆಗೆ ಬರ ಪರಿಹಾರಕ್ಕಾಗಿ 500 ಕೋಟಿ ರೂ. ಅಗತ್ಯವಿದೆ ಎಂದಿದ್ದಾರೆ. ಹಾಗಾದರೆ ಪ್ರತಿ ಜಿಲ್ಲೆಗೆ ಸರ್ಕಾರ ಎಷ್ಟು ಹಣ ಮೀಸಲಿಟ್ಟಿದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು. ಬಿಡದಿ ಭಾಗದ ರೈತರು ಸುಮಾರು 500ಕ್ಕೂ ಹೆಚ್ಚು ದಿನಗಳಿಂದ ಭೂಮಿ ನೀಡುವುದಿಲ್ಲ ಎಂದು ಹೋರಾಟ ನಡೆಸುತ್ತಿದ್ದಾರೆ. ರೈತರ ಪರವಾಗಿ ಜೆಡಿಎಸ್ ಮೊದಲಿನಿಂದಲೂ ನಿಂತಿದೆ. ಜೆಡಿಎಸ್ ರೈತ ಪರ ಪಕ್ಷವಾಗಿದ್ದು, ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಹೋರಾಟ ನಡೆಸುತ್ತದೆ ಎಂದರು.
ನೈಸ್ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಗಳನ್ನು ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಜುಲೈ 28ರಂದೇ ನ್ಯಾಯಾಲಯದ ಆದೇಶ ಬಂದಿದ್ದರೂ, ಸರ್ಕಾರ ಇನ್ನೂ ಅದನ್ನು ನೋಡಿಲ್ಲ ಎನ್ನುವುದು ಆಶ್ಚರ್ಯಕರವಾಗಿದೆ. ಕಳೆದ ಹಲವು ವರ್ಷಗಳಿಂದ ರೈತರ ಭೂಮಿಯನ್ನು ವಶಪಡಿಸಿಕೊಂಡರೂ ಪರಿಹಾರ ನೀಡಿಲ್ಲ. ಪತ್ರವನ್ನು ಪರಿಶೀಲಿಸಿ ಕಾನೂನಿನ ವ್ಯಾಪ್ತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು. ಇದನ್ನೂ ಓದಿ : ಚೀನಾದಲ್ಲೂ ‘ರಾಮಾಯಣ’ ಸಿನಿಮಾದ ಟ್ರೇಲರ್ ನೋಡಿ ಫಿದಾ ಆದ ಪ್ರೇಕ್ಷಕರು..!
