August 27, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ; ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ..!

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಕ್ಷೀಣಿಸಿ ಕಾವೇರಿ ಕೊಳ್ಳದ ರೈತರು ಮತ್ತೊಮ್ಮೆ ಬರಗಾಲದ ಆತಂಕದಲ್ಲಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಜನ ಹನಿ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಕಠಿಣ ಪರಿಸ್ಥಿತಿಯಲ್ಲೂ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಕನ್ನಡಿಗರಿಗೆ ಮಹಾದ್ರೋಹ ಎಸಗುತ್ತಿದ್ದು, ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರವಾಗಿ ಆರೋಪಿಸಿದ್ದಾರೆ.

ಕುಡಿಯುವ ನೀರಿನ ನೆಪವೊಡ್ಡಿ ಕಾವೇರಿ ಕೊಳ್ಳದ ಜೀವನಾಡಿಯಾದ ಕೆಆರ್‌ಎಸ್ ಜಲಾಶಯದಿಂದ ಕಳೆದ ಮೂರು ದಿನಗಳಿಂದ ಪ್ರತಿದಿನ 2,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಆರ್. ಅಶೋಕ್, ‘ಕಾಂಗ್ರೆಸ್ ಪಕ್ಷದ ಇತಿಹಾಸವೇ ಇಷ್ಟು. ಅಧಿಕಾರವಿಲ್ಲದಾಗ ‘‘ನಮ್ಮ ನೀರು ನಮ್ಮ ಹಕ್ಕು’’ ಎಂದು ನಾಟಕದ ಬೊಬ್ಬೆ ಹೊಡೆಯುತ್ತಾರೆ.

ಆದರೆ ಅಧಿಕಾರ ಸಿಕ್ಕ ತಕ್ಷಣ ‘‘ನಮ್ಮ ನೀರು ತಮಿಳುನಾಡಿನ ಹಕ್ಕು’’ ಎಂದು ಶರಣಾಗುತ್ತಾರೆ. ಕೇವಲ ರಾಜಕೀಯ ಮೈತ್ರಿಗಾಗಿ, ಅಧಿಕಾರದ ಆಸೆಗಾಗಿ ಅಂದು ಡಿಎಂಕೆ, ಇಂದು ಟಿವಿಕೆ ಜೊತೆ ಮೈತ್ರಿ ಮಾಡಿಕೊಂಡು ಕನ್ನಡಿಗರಿಗೆ ಪದೇ ಪದೇ ಅನ್ಯಾಯ ಮಾಡುತ್ತಿದ್ದಾರೆ. ನಾಡಿನ ಜನತೆಯ ಹಿತ ಕಾಯದೆ ದೆಹಲಿ ಹೈಕಮಾಂಡ್ ಅಣತಿಯಂತೆ ಕನ್ನಡಿಗರ ಹಿತವನ್ನು ಬಲಿ ಕೊಡುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನೇರವಾಗಿ ಪ್ರಶ್ನಿಸಿರುವ ಅಶೋಕ್, ‘ಚುನಾವಣೆಗೆ ಮುನ್ನ ರಾಜಕೀಯ ಲಾಭಕ್ಕಾಗಿ ಮೇಕೆದಾಟು ಹೆಸರಿನಲ್ಲಿ ಪಾದಯಾತ್ರೆಯ ಬೀದಿನಾಟಕ ಮಾಡಿದ್ದರಲ್ಲ ಸ್ವಾಮಿ, ಈಗ ಯಾವ ಯಾತ್ರೆ ಮಾಡುತ್ತೀರಿ? ನೀರಿಲ್ಲದೆ, ಬೆಳೆಯಿಲ್ಲದೆ ಕಾವೇರಿ ಕೊಳ್ಳದ ನಮ್ಮ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಶವಯಾತ್ರೆ ಮಾಡುತ್ತೀರಾ? ಅಥವಾ ಬೆಂಗಳೂರಿನ ಜನ ಟ್ಯಾಂಕರ್ ಮಾಫಿಯಾ ಸುಲಿಗೆಗೆ ಸಿಕ್ಕಿ ಪರದಾಡಿದರೆ ಟ್ಯಾಂಕರ್ ಯಾತ್ರೆ ಮಾಡುತ್ತೀರಾ’ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ. ಕನ್ನಡ ನಾಡಿನ ಜನತೆಗೆ ಕನಿಷ್ಠ ನೀರಿನ ಭದ್ರತೆ ಹಾಗೂ ಹಕ್ಕನ್ನು ನೀಡಲಾಗದ ಈ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಆರ್. ಅಶೋಕ್ ಎಚ್ಚರಿಸಿದ್ದಾರೆ. ಇದನ್ನೂ ಓದಿ : ಹನುಮನ ಅವತಾರ ಧರಿಸೋಕೂ ಮುನ್ನ ರಿಷಬ್ ಮನೆಯಲ್ಲಿ ʻಶ್ರೀರಾಮ ಭಜನೆʼ ಮಹಾ ಮೇಳ..!

Related posts

ಅಪ್ರಾಪ್ತ ಆರೋಪಿಗಳ ಮೇಲೆ ಅಮಾನವೀಯ ಕೃತ್ಯ ಆರೋಪ – PSI ಬಂಧನ..!

Kalpana Editor

ಹನಿಮೂನ್​ಗೆ ಕರೆದೊಯ್ದು ಪತಿ ಹತ್ಯೆ ಪ್ರಕರಣ: ಆರೋಪಿ ಜಾಮೀನು ರದ್ದು..!

Kalpana Editor

ಕಾವೇರಿ ವಕೀಲರನ್ನು ಕತ್ತಲೆಯಲ್ಲಿಟ್ಟ ರಾಜ್ಯ ಸರಕಾರ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ..!

kknewskannada1987@gmail.com