ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಪಾಕಿಸ್ತಾನವನ್ನು ದೀರ್ಘಕಾಲ ದ್ವೇಷಿಸಬಾರದು ಎಂಬರ್ಥದಲ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಭಾರತೀಯ ಜನತಾ ಪಕ್ಷದ (ಬಿಜೆಪಿ) ಆಧಾರ ಸ್ತಂಭವೇ ಆರ್ಎಸ್ಎಸ್. ಆರ್ಎಸ್ಎಸ್ ನೀಡುವ ಸೂಚನೆಗಳನ್ನು ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಪಾಲಿಸುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪಾಕಿಸ್ತಾನದ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ ಪಡೆಯುತ್ತಿದ್ದ ಬಿಜೆಪಿ ನಾಯಕರು, ಇದೀಗ ಆರ್ಎಸ್ಎಸ್ ಮುಖ್ಯಸ್ಥರು ಪಾಕಿಸ್ತಾನದೊಂದಿಗೆ ಸ್ನೇಹದ ಮಾತುಗಳನ್ನಾಡಿರುವ ಸಂದರ್ಭದಲ್ಲಿ ಮೌನವಾಗಿರುವುದೇಕೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ದೇಶದಲ್ಲಿ ಪಾಕಿಸ್ತಾನದ ಪರ ಮಾತನಾಡುವವರನ್ನು ದೇಶದ್ರೋಹಿಗಳು ಎಂದು ಬಿಂಬಿಸುವ ಬಿಜೆಪಿ ನಾಯಕರು, ಇದೇ ವಿಚಾರದಲ್ಲಿ ಆರ್ಎಸ್ಎಸ್ ಮುಖ್ಯಸ್ಥರ ಹೇಳಿಕೆಗೆ ಏಕೆ ಪ್ರತಿಕ್ರಿಯಿಸುತ್ತಿಲ್ಲ ಎಂಬುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಹೇಳಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ದೇಶದ ಯುವಜನರು ವಿವಿಧ ವಿಚಾರಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಮೋಹನ್ ಭಾಗವತ್ ಅವರ ಹೇಳಿಕೆ ಕುತೂಹಲ ಮೂಡಿಸಿದೆ. ಪಾಕಿಸ್ತಾನದೊಂದಿಗೆ ಸ್ನೇಹ ಬೆಳೆಸುವ ಕುರಿತು ಅವರು ನೀಡಿರುವ ಹೇಳಿಕೆಯ ಹಿಂದೆ ಯಾವುದಾದರೂ ರಾಜಕೀಯ ತಂತ್ರವಿದೆಯೇ ಎಂಬುದನ್ನು ಕೇಂದ್ರ ಸರ್ಕಾರ ತನಿಖೆ ನಡೆಸಿ ಸತ್ಯಾಂಶವನ್ನು ಜನರ ಮುಂದೆ ಇಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಮೋಹನ್ ಭಾಗವತ್ ಅವರ ಹೇಳಿಕೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಈ ಕುರಿತು ಕೂಡಲೇ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ನೇತೃತ್ವವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ವಹಿಸಿದ್ದರು.
ಈ ಪ್ರತಿಭಟನೆಯಲ್ಲಿ ಪ್ರಕಾಶ್ ಜಿ., ಹೇಮರಾಜು, ಆನಂದ್ ಕುಮಾರ್, ಎಂ.ಎಸ್. ಮುರುಳಿ, ಉಮೇಶ್, ಓಬಳೇಶ್, ಪುಟ್ಟರಾಜು, ಕುಶಲ್, ಹರವೇಗೌಡ, ರಂಜಿತ್, ಮಾಧವ ಹನೂರು, ಶಾಹಿನ್ ಷರೀಫ್, ನವೀನ್, ಅಜಯ್, ಕಿಶೋರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. ಇದನ್ನೂ ಓದಿ : ಬಹುದಿನಗಳ ಕನಸು ನನಸು; ಹಾಸನ ಜಿಲ್ಲೆಗೆ ಬಂತು ವಂದೇ ಭಾರತ್ ಎಕ್ಸ್ಪ್ರೆಸ್
