ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಕ್ಷಣಕ್ಕೊಂದು ಬೆಳವಣಿಗೆಯಾಗುತ್ತಿದ್ದು, ಅಧಿಕಾರ ಹಂಚಿಕೆ ಬಹುತೇಕ ಫೈನಲ್ ಆದಂತಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಪ್ತ ಸಚಿವರೊಂದಿಗೆ ಮಂಗಳವಾರ ತಡರಾತ್ರಿವರೆಗೂ ಸಭೆ ನಡೆಸಿದ್ದಾರೆ. ಮಧ್ಯರಾತ್ರಿ 2 ಗಂಟೆಯವರೆಗೂ ನಡೆದ ಈ ಸಭೆಯಲ್ಲಿ ಮುಂದಿನ ರಾಜಕೀಯ ನಡೆಗಳು ಹಾಗೂ ಹೈಕಮಾಂಡ್ನೊಂದಿಗಿನ ಮಾತುಕತೆಗಳ ಬಗ್ಗೆ ಚರ್ಚಿಸಲಾಗಿದೆ.
ಸಿಎಂ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಆಪ್ತರ ಬಳಗದಲ್ಲಿ ಆತಂಕ ಮೂಡಿಸಿದ್ದು, ರಾಜಕೀಯ ಭವಿಷ್ಯದ ಕುರಿತು ಸಿಎಂ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ಅನಿರೀಕ್ಷಿತ ಬೆಳವಣಿಗೆಯಾಗಿ ಸಚಿವ ಹೆಚ್.ಕೆ. ಪಾಟೀಲ್ ಗದಗದಲ್ಲಿ ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ದಿಢೀರನೆ ಬೆಂಗಳೂರಿಗೆ ಆಗಮಿಸಿದ್ದಾರೆ. ಇತ್ತೀಚಿನ ಈ ಬದಲಾವಣೆಗಳಿಂದ ಸಿಎಂ ಆಪ್ತ ಬಳಗದಲ್ಲಿ ಆಘಾತ ಮೂಡಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರೆಂದು ಬಿಂಬಿಸುವ ಪೋಸ್ಟರ್ ಅಭಿಯಾನವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಾರಂಭವಾಗಿದೆ. ‘ಟೀಮ್ ಡಿಕೆ’ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ಈ ಅಭಿಯಾನ ನಡೆಯುತ್ತಿದ್ದು, ಡಿ.ಕೆ. ಶಿವಕುಮಾರ್ ಅವರ 45 ವರ್ಷಗಳ ರಾಜಕೀಯ ಅನುಭವ ಮತ್ತು ತಳಮಟ್ಟದಿಂದ ಬೆಳೆದು ಬಂದ ಹಾದಿಯನ್ನು ಉಲ್ಲೇಖಿಸಿ, ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸೂಕ್ತರೆಂದು ಪ್ರಚಾರ ಮಾಡಲಾಗುತ್ತಿದೆ.
