ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಹಾಗೂ ಸಂಸತ್ತಿನಲ್ಲಿ ಗೊಂದಲ ಸೃಷ್ಟಿಸಲು ವಿದ್ಯಾರ್ಥಿಗಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಎದುರು ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆಯನ್ನು ಧರ್ಮೇಂದ್ರ ಪ್ರಧಾನ್ ಖಂಡಿಸಿ ಎಕ್ಸ್ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಗೊಂದಲ ಸೃಷ್ಟಿಸಲು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದ್ದಾರೆ.
ನೀಟ್ ವಿಚಾರವಾಗಿ ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಸಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ ಎಂದು ತಿಳಿಸಿದರೂ, ಕಾಂಗ್ರೆಸ್ ಪ್ರಜಾಸತ್ತಾತ್ಮಕ ಚರ್ಚೆಯನ್ನು ಬಿಟ್ಟು ರಾಜಕೀಯ ನಾಟಕಕ್ಕೆ ಆದ್ಯತೆ ನೀಡಿದೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ವಿದ್ಯಾರ್ಥಿಗಳಿಗೆ ಬರಿ ಘೋಷಣೆಗಳನ್ನು ನೀಡುವುದಲ್ಲ. ಅವರಿಗೆ ನಿಖರ ಉತ್ತರಗಳು, ಶೈಕ್ಷಣಿಕ ಸುಧಾರಣೆಗಳು ಮತ್ತು ಹೊಣೆಗಾರಿಕೆಯನ್ನು ತಲುಪಿಸುವ ಅಗತ್ಯವಿದೆ. ನಮ್ಮ ಸರ್ಕಾರ ಈ ನಿಟ್ಟಿನಲ್ಲಿ ಸಂಪೂರ್ಣ ಬದ್ಧವಾಗಿದೆ.
ಪ್ರಧಾನಿ ನಿವಾಸದ ಎದುರು ಧರಣಿ ನಡೆಸುವ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಲಾಗಿದ್ದು, ಭದ್ರತಾ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದ್ದಾರೆ. ನೀಟ್ ಅಕ್ರಮಗಳನ್ನು ಖಂಡಿಸಿ ಹಾಗೂ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಪ್ರಧಾನಿ ನಿವಾಸದ ಕಡೆಗೆ ಮೆರವಣಿಗೆ ನಡೆಸಿ ಧರಣಿ ಕುಳಿತಿದ್ದರು. ಈ ವೇಳೆ ದೆಹಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಇದನ್ನೂ ಓದಿ : ವಾಂಗ್ಚುಕ್ರನ್ನು ಭೇಟಿಯಾದ ಕೇಂದ್ರ ಸಚಿವರು; ಇಂದು ಸಿಜೆಪಿ ಜೊತೆ ಮತ್ತೊಂದು ಸಭೆ..!
