ಬೆಳಗಾವಿ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದಿದ್ದ ಜಾರಿ ನಿರ್ದೇಶನಾಲಯದ ಸುದೀರ್ಘ ದಾಳಿ ಕೊನೆಗೂ ಅಂತ್ಯವಾಗಿದೆ.
ಸತತ 24 ಗಂಟೆಗಳ ಕಾಲ ನಡೆಸಿದ ಸುದೀರ್ಘ ಶೋಧಕಾರ್ಯದ ಬಳಿಕ ಇಡಿ ಅಧಿಕಾರಿಗಳು ಬೆಳಗಾವಿಯಿಂದ ನಿರ್ಗಮಿಸಿದ್ದಾರೆ. ಅಬಕಾರಿ ಇಲಾಖೆಯ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಇಡಿ ಅಧಿಕಾರಿಗಳು, ಬೆಳಗಾವಿ ನಗರದ ಟಿವಿ ಸೆಂಟರ್ನಲ್ಲಿರುವ ಮಂಜುನಾಥ್ ಅವರ ಮುಖ್ಯ ನಿವಾಸ ಸೇರಿದಂತೆ ಜಿಲ್ಲೆಯ ಒಟ್ಟು ಆರು ಕಡೆಗಳಲ್ಲಿ ಬುಧವಾರ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.
ರಾಜ್ಯಾದ್ಯಂತ ಬೆಂಗಳೂರು, ಮೈಸೂರು ಸೇರಿದಂತೆ ಒಟ್ಟು 10ಕ್ಕೂ ಹೆಚ್ಚು ಕಡೆಗಳಲ್ಲಿ ಈ ದಾಳಿ ನಡೆದಿತ್ತು. ಲಭ್ಯವಾಗಿರುವ ಎಲ್ಲಾ ಪ್ರಮುಖ ದಾಖಲೆಗಳೊಂದಿಗೆ ಇಡಿ ಅಧಿಕಾರಿಗಳ ತಂಡವು ಬೆಂಗಳೂರಿಗೆ ತೆರಳಿದ್ದು, ದಾಳಿಯ ಸಂಪೂರ್ಣ ವರದಿಯನ್ನು ಇಡಿ ನಿರ್ದೇಶಕರಿಗೆಸಲ್ಲಿಸಲಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಅವರ ಆಪ್ತರಾಗಿರುವ ಗೋವಾ ಮೂಲದ ‘ಲೋಬೋ’ ಎಂಬುವವರಿಗಾಗಿ ಇಡಿ ಅಧಿಕಾರಿಗಳು ಬೆಳಗಾವಿಯಲ್ಲಿ ತೀವ್ರ ಹುಡುಕಾಟ ನಡೆಸಿದ್ದರು. ಆದರೆ ಬೆಳಗಾವಿಯಲ್ಲಿ ಲೋಬೋ ಪತ್ತೆಯಾಗದ ಹಿನ್ನೆಲೆಯಲ್ಲಿ, ಅವರನ್ನು ವಶಕ್ಕೆ ಪಡೆಯಲು ಇಡಿಯ ಎರಡು ವಿಶೇಷ ತಂಡಗಳು ಈಗಾಗಲೇ ಗೋವಾಗೆ ರವಾನೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರಿ ಸಂಬಳ ಪಡೆಯುತ್ತಲೇ ಕೋಟ್ಯಂತರ ರೂಪಾಯಿಗಳ ಅಕ್ರಮ ಎಸಗಿದ್ದಾರೆ ಎಂಬ ಗಂಭೀರ ಆರೋಪ ಮಂಜುನಾಥ್ ಮೇಲಿದೆ. ಆದಾಯಕ್ಕಿಂತ ಅಧಿಕವಾಗಿ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಸಂಪಾದನೆ, ಅಬಕಾರಿ ಇಲಾಖೆಯ ಉನ್ನತ ಹುದ್ದೆಯಲ್ಲಿದ್ದುಕೊಂಡೇ ಬೇರೆಯವರ ಹೆಸರಿನಲ್ಲಿ ನೂರಕ್ಕೂ ಹೆಚ್ಚು ಬಾರ್ ಲೈಸೆನ್ಸ್ ಹೊಂದಿರುವ ಆರೋಪ, ದೇಶದ ಗಡಿ ದಾಟಿ ನಡೆದಿರುವ ಆರ್ಥಿಕ ವಹಿವಾಟುಗಳು, ಹವಾಲಾ ಮಾರ್ಗಗಳ ಮೂಲಕ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಿರುವ ಶಂಕೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಇದನ್ನೂಓದಿ : ಹೈಕಮಾಂಡ್ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ..!
