ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ನಿಧದ ಹಿನ್ನೆಲೆ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ಈ ನಡುವೆ ಅಜ್ಜಿ ಮೃತಪಟ್ಟಿರುವ ಸುದ್ದಿ ಕೇಳಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೂಡ ಕಣ್ಣೀರು ಹಾಕಿದ್ದಾರೆ.
ಅಜ್ಜಿ ಚೆನ್ನಮ್ಮರ ಪ್ರೀತಿಯ ಮೊಮ್ಮಗನಾಗಿದ್ದರೂ ಆಕೆಯ ಕೊನೆ ಕಾಲದಲ್ಲಿ ಕನಿಷ್ಠ ಅವರ ಮುಖವನ್ನು ನೋಡಲೂ ಸಾಧ್ಯವಾಗದ ಕಾರಣ ಮಾಜಿ ಸಂಸದ ಭಾವುಕರಾಗಿದ್ದಾರೆ. ಅಜ್ಜಿಯನ್ನು ನೆನೆದು ಪ್ರಜ್ವಲ್ ಬಿಕ್ಕಿ ಬಿಕ್ಕಿ ಅತ್ತಿದ್ದು, ರಾತ್ರಿಯಿಡೀ ನಿದ್ದೆ ಮಾಡದೆ ಮೌನಕ್ಕೆ ಶರಣಾಗಿದ್ದಾರೆ. ಅಜ್ಜಿ ಚೆನ್ನಮ್ಮ ನಿಧನರಾಗಿರುವ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತುರ್ತು ಪೆರೋಲ್ ಕೋರಿ ಜೈಲಾಧಿಕಾರಿಗಳಿಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲಲ್ಲಿದ್ದಾರೆ. ಅಜ್ಜಿ ಚೆನ್ನಮ್ಮ ನಿಧನರಾಗಿದ್ದು, ಅಂತಿಮ ದರ್ಶನಕ್ಕೆ ಪೆರೋಲ್ ಕೋರಿ ಅರ್ಜಿ ಸಲ್ಲಿಸಿದ್ದಾರೆ. ತುರ್ತು ಸಂದರ್ಭಗಳಲ್ಲಿ ಪೆರೋಲ್ ನೀಡಲು ಕಾನೂನಿನಲ್ಲಿ ಅವಕಾಶ ಇದೆ. ಈ ಬಗ್ಗೆ ಪರಪ್ಪನ ಅಗ್ರಹಾರದ ಕೇಂದ್ರ ಕಾರಗೃಹದ ಮುಖ್ಯ ಅಧೀಕ್ಷಕರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ : ಚೆನ್ನಮ್ಮ ನನಗೆ ತಾಯಿ ಸಮಾನರು; ದೇವೇಗೌಡರ ಪತ್ನಿ ನಿಧನಕ್ಕೆ ಬೊಮ್ಮಾಯಿ ಸಂತಾಪ..!
