21.9 C
ಬೆಂಗಳೂರು
August 7, 2026
kranthikidi.com
ತಾಜಾಸುದ್ದಿರಾಜ್ಯ

ಕಾವೇರಿ/ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಳ; 105 ಅಡಿಗೆ ತಲುಪಿದ ನೀರಿನ ಮಟ್ಟ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಂಡ ಬೆನ್ನಲ್ಲೇ, ಸಕ್ಕರೆ ನಾಡು ಮಂಡ್ಯದ ರೈತರ ಮೊಗದಲ್ಲಿ ಹೊಸ ಭರವಸೆ ಮೂಡಿದೆ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಈಗ 105 ಅಡಿಗೆ ಏರಿಕೆಯಾಗಿದ್ದು, ಮುಂಗಾರು ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕೆಂದು ಮಂಡ್ಯ ಜಿಲ್ಲೆಯ ರೈತರು ಸರ್ಕಾರವನ್ನು ತೀವ್ರವಾಗಿ ಆಗ್ರಹಿಸುತ್ತಿದ್ದಾರೆ.

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದಾಗ, ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯ ರೈತರಿಗೆ ಕಠಿಣ ಸೂಚನೆಯೊಂದನ್ನು ನೀಡಿತ್ತು. ಯಾವುದೇ ಹೊಸ ಬೆಳೆ ಬಿತ್ತನೆ ಮಾಡಬೇಡಿ, ಕುಡಿಯುವ ನೀರಿಗೆ ಆದ್ಯತೆ ನೀಡಬೇಕಾಗಿದೆ ಎಂದು ರೈತರನ್ನು ಕೈ ಕಟ್ಟಿ ಹಾಕಿತ್ತು. ಆದರೆ ಈಗ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕೆಆರ್‌ಎಸ್ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರ ಪರಿಣಾಮ ಡ್ಯಾಂ ನೀರಿನ ಮಟ್ಟ ಭರಪೂರ 105 ಅಡಿ ತಲುಪಿದೆ ಎಂದು ವರದಿಯಾಗಿದೆ.

ಡ್ಯಾಂನ ನೀರಿನ ಮಟ್ಟ 105 ಅಡಿಗೆ ಏರಿಕೆಯಾಗುತ್ತಿದ್ದಂತೆ ಮಂಡ್ಯ ಜಿಲ್ಲೆಯ ರೈತರು ಕೃಷಿ ಚಟುವಟಿಕೆಗೆ ಸಜ್ಜಾಗುತ್ತಿದ್ದಾರೆ. ಮುಂಗಾರು ಹಂಗಾಮಿನ ಹೊಸ ಬೆಳೆಗೆ ಕೂಡಲೇ ನಾಲೆಗಳಿಗೆ ನೀರು ಹರಿಸುವುದಾಗಿ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ಬಿತ್ತನೆಗೆ ಇದು ಸೂಕ್ತ ಸಮಯವಾಗಿದ್ದು, ಸರ್ಕಾರ ತಡ ಮಾಡಿದರೆ, ಕೈಗೆ ಬಂದ ಬೆಳೆ ಬಾಯಿಗೆ ಬಾರದಂತಾಗುತ್ತದೆ ಎಂಬುದು ರೈತರ ಆತಂಕವಾಗಿದೆ.

ತುಂಗಭದ್ರಾ ಜಲಾಶಯ ಇದು ಮೂರು ರಾಜ್ಯದ ಒಂಬತ್ತು ಜಿಲ್ಲೆಗಳ ಜೀವನಾಡಿ, ಲಕ್ಷಾಂತರ ಜನರು ಈ ಜಲಾಶಯವನ್ನೆ ನಂಬಿ ಜೀವನ ನಡೆಸುತ್ತಾರೆ. ಆದರೆ ಈ ವರ್ಷ ಮಳೆರಾಯನ ಮುನಿಸಿನಿಂದ, ಜಲಾಶಯ ಖಾಲಿ ಖಾಲಿಯಾಗಿತ್ತು. ಆದರೆ ಕಳೆದೊಂದು ವಾರದಿಂದ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಏರಿಕೆಯಾಗಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯಕ್ಕೆ ಜೀವಕಳೆ ಬಂದಿದೆ. ಮಲೆನಾಡ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಡ್ಯಾಂಗೆ ಅಪಾರ ಪ್ರಮಾಣದ ಒಳಹರಿವು ದಾಖಲಾಗುತ್ತಿದ್ದು, ಜಲಾಶಯ ಈಗ ಅರ್ಧದಷ್ಟು ಭರ್ತಿಯಾಗಿದೆ.

ಈ ಪ್ರಸಕ್ತ ಸಾಲಿನಲ್ಲಿ ಬೆಳೆಗಳಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದ್ದರಿಂದ ಆತಂಕಕ್ಕೊಳಗಾಗಿದ್ದ ರೈತರಿಗೆ, ಈ ನೀರಿನ ಹರಿವು ಹೊಸ ಭರವಸೆಯನ್ನು ತಂದುಕೊಟ್ಟಿದೆ. 105 ಟಿಎಂಸಿ ಸಾಮರ್ಥ್ಯ ಹೊಂದಿರುವ ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 51.145 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ ಬರೋಬ್ಬರಿ 91 ಸಾವಿರಕ್ಕೂ ಅಧಿಕ ಕ್ಯೂಸೆಕ್ ಒಳಹರಿವಿನ ಪ್ರಮಾಣ ದಾಖಲಾಗುತ್ತಿದ್ದು, ನೀರಿನ ಮಟ್ಟ ವೇಗವಾಗಿ ಏರಿಕೆ ಯಾಗುತ್ತಿದೆ. ಕೇವಲ ಒಂದೇ ದಿನದಲ್ಲಿ ಭಾರಿ ಪ್ರಮಾಣದ ನೀರು ಹರಿದು ಬಂದಿದ್ದು, 7 ಟಿಎಂಸಿ ನೀರು ಸಂಗ್ರಹವಾಗಿದೆ. 44 ಟಿಎಂಸಿ ಇದ್ದ ನೀರಿನ ಸಂಗ್ರಹ 51 ಟಿಎಂಸಿಗೆ ಏರಿಕೆಯಾಗಿದೆ. ಇದನ್ನೂ ಓದಿ : ಖಾಲಿ ಇರುವ ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ಶಾಸಕರ ನಡುವೆ ತೀವ್ರ ಪೈಪೋಟಿ..!

Related posts

ಕೆಆರ್‌ಎಸ್‌ ಖಾಲಿ ಖಾಲಿ; ಇನ್ನಿರೋದು ಕೇವಲ 11 ಟಿಎಂಸಿ ನೀರು..!

Kalpana Editor

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಶರದ್ ಪವಾರ್, ಸುಪ್ರಿಯಾ ಸುಳೆ

Kalpana Editor

ಬಲವಂತವಾಗಿ ಜಿಮ್ಖಾನಾ ಕ್ಲಬ್​ ಖಾಲಿ ಮಾಡಿಸುವುದಿಲ್ಲ; ಸರ್ಕಾರ ಸ್ಪಷ್ಟನೆ..!

Kalpana Editor