July 11, 2026
kranthikidi.com
ತಾಜಾಸುದ್ದಿರಾಜ್ಯ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ – ರಾಜ್ಯ ಸರ್ಕಾರದ ವಿರುದ್ಧ ಬಸವರಾಜ ಬೊಮ್ಮಾಯಿ ಆಕ್ರೋಶ..!

ಗದಗ : ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾರೀ ಗೊಂದಲ ಹಾಗೂ ಅಕ್ರಮಗಳು ನಡೆಯುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ​ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಮ್ಯಾಪಿಂಗ್ ಮುಗಿದ ನಂತರ ಫಾರ್ಮ್‌ಗಳನ್ನು ನೀಡಿ, ಅವುಗಳನ್ನು ಭರ್ತಿ ಮಾಡಿ ಸ್ಕ್ಯಾನ್ ಮಾಡಬೇಕೆಂಬ ಆದೇಶವಿದೆ.

ಆದರೆ, ಕಳೆದ ನಾಲ್ಕು ದಿನಗಳಿಂದ ಹಲವೆಡೆ ಬಿಎಲ್‌ಒಗಳು ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ. ಈ ಬಗ್ಗೆ ಫೋನ್ ಮಾಡಿ ಕೇಳಿದರೆ, ‘ನಮಗೆ ಬೇರೆ ಕೆಲಸವಿದೆ, ಅದನ್ನು ಮುಗಿಸಿಕೊಂಡು ಬರುತ್ತೇವೆ’ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ. ತಹಶೀಲ್ದಾರ್‌ ಅವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಪ್ರತಿ ಕ್ಷೇತ್ರದಲ್ಲಿ ಕನಿಷ್ಠ 20 ರಿಂದ 25 ಬಿಎಲ್‌ಒಗಳು ಗೈರುಹಾಜರಾಗುತ್ತಿದ್ದಾರೆ ಎಂದು ದೂರಿದರು.

​ಖಾಸಗಿ ಜಾಗಗಳಲ್ಲಿ ಫಾರ್ಮ್‌ ಭರ್ತಿ – ​ನಿಯಮಾವಳಿಗಳ ಪ್ರಕಾರ ನಡೆಯಬೇಕಾದ ಪ್ರಕ್ರಿಯೆಯನ್ನು ಗಾಳಿಗೆ ತೂರಲಾಗಿದ್ದು, ಮಸೀದಿಗಳು ಹಾಗೂ ಕೆಲವು ಖಾಸಗಿ ಜಾಗಗಳಲ್ಲಿ ಗುಂಪು ಗುಂಪಾಗಿ ಕುಳಿತು ಬಂಚ್‌ಗಟ್ಟಲೆ ಫಾರ್ಮ್‌ಗಳನ್ನು ಭರ್ತಿ ಮಾಡಲಾಗುತ್ತಿದೆ. ಕೆಲವು ದೇವಸ್ಥಾನ ಮತ್ತು ಕಲ್ಯಾಣ ಮಂಟಪಗಳಲ್ಲೂ ಈ ರೀತಿಯ ಅಕ್ರಮಗಳು ನಡೆಯುತ್ತಿವೆ. ಇದನ್ನು ಕೇಳುವವರೇ ಇಲ್ಲದಂತಾಗಿದೆ. ರಾಜ್ಯ ಸರ್ಕಾರವು ಎಸ್‌ಐಆರ್ ಪ್ರಕ್ರಿಯೆಯನ್ನು ದಾರಿ ತಪ್ಪಿಸಲು ಹಾಗೂ ಹಳ್ಳ ಹಿಡಿಸಲು ಈ ರೀತಿ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

​ಒಂದೇ ಹೆಸರಿನಲ್ಲಿ ಮೂರು ಮತಗಳು: ಎಚ್‌.ಕೆ. ಪಾಟೀಲ್ ಹೆಸರು – ​ಗದಗ ಮತ್ತು ರೋಣ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಎರಡು ಮೂರು ಕಡೆ ಹೆಸರುಗಳು ಸೇರ್ಪಡೆಯಾಗಿವೆ. ಮ್ಯಾಪಿಂಗ್ ಮಾಡಿದ್ದರೂ ಸಹ ಅನರ್ಹರ ಹೆಸರುಗಳು ಮತ್ತೆ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಿವೆ. ಇದಕ್ಕೆ ಉದಾಹರಣೆಯಾಗಿ ಮಾಜಿ ಸಚಿವ ಎಚ್‌.ಕೆ. ಪಾಟೀಲ್ ಅವರ ಹೆಸರನ್ನೇ ಬೊಮ್ಮಾಯಿ ಅವರು ಪ್ರಸ್ತಾಪಿಸಿದರು.

​”ಹುಲಕೋಟಿಯ ಹನುಮಂತಗೌಡ ಕೃಷ್ಣಗೌಡ ಪಾಟೀಲ್ (ಎಚ್‌.ಕೆ. ಪಾಟೀಲ್) ಅವರ ಹೆಸರೇ ಬೂತ್ ನಂಬರ್ 143 (ಕ್ರಮ ಸಂಖ್ಯೆ 161 ಮತ್ತು 183) ಹಾಗೂ ಬೂತ್ ನಂಬರ್ 153 (ಕ್ರಮ ಸಂಖ್ಯೆ 393) ರಲ್ಲಿ ಮೂರು ಬಾರಿ ದಾಖಲಾಗಿದೆ. ಒಬ್ಬ ಜವಾಬ್ದಾರಿಯುತ ಸಚಿವರ ಹೆಸರೇ ಮತದಾರರ ಪಟ್ಟಿಯಲ್ಲಿ ಮೂರು ಬಾರಿ ಬಂದರೆ, ಇನ್ನು ಸಾಮಾನ್ಯ ಜನರ ಪರಿಸ್ಥಿತಿ ಏನು? ಯಾವ ರೀತಿಯ ಪರಿಷ್ಕರಣೆ ನಡೆಯುತ್ತಿದೆ?” ಎಂದು ಅವರು ಪ್ರಶ್ನಿಸಿದರು.

​ಚುನಾವಣಾ ಆಯೋಗದಿಂದ ಲಭ್ಯವಾಗಿರುವ ಅಧಿಕೃತ ಪ್ರತಿಯನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದ ಅವರು, ಇಂತಹ ಲೋಪದೋಷಗಳನ್ನು ಸರಿಪಡಿಸುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದ್ದರೂ ಅವರು ಯಾವುದೇ ಗಂಭೀರ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ರೋಣ ಕ್ಷೇತ್ರದ ಅಲ್ಲಾಸಾಬ್ ನದಾಫ್ ಅವರ ಹೆಸರಿನಲ್ಲೂ ಇಂತಹದೇ ಲೋಪ ಕಂಡುಬಂದಿದೆ ಎಂದು ಅವರು ತಿಳಿಸಿದರು.

ಗದಗ, ರೋಣ ಕ್ಷೇತ್ರಗಳಲ್ಲಿ ಸಾವಿರಾರು ನಕಲಿ ಮತಗಳು ಪತ್ತೆ – ಮತದಾರರ ಪಟ್ಟಿಯಲ್ಲಿ ಒಂದೇ ಹೆಸರಿನ ದ್ವಿಪ್ರತಿ ತ್ರಿಪ್ರತಿ ಹಾಗೂ ನಾಲ್ಕೈದು ಕಡೆ ಒಂದೇ ಹೆಸರಿರುವ ಪ್ರಕರಣಗಳು ದಾಖಲೆಯ ಸಮೇತ ಬೆಳಕಿಗೆ ಬಂದಿವೆ ರೋಣ ಕ್ಷೇತ್ರದಲ್ಲಿ ಒಟ್ಟು 3,804 ಮತಗಳು ನಕಲಿಯಾಗಿವೆ. ಒಬ್ಬನೇ ವ್ಯಕ್ತಿಯ ಹೆಸರು ನಾಲ್ಕರಿಂದ ಐದು ಕಡೆ ಇರುವುದು ಪತ್ತೆಯಾಗಿದೆ. ಗದಗ ಕ್ಷೇತ್ರದಲ್ಲೂ ಸಹ ಇದೇ ರೀತಿಯ 2,305 ಡಬಲ್ ಹಾಗೂ ತ್ರಿಬಲ್ ಮತಗಳು ಪತ್ತೆಯಾಗಿವೆ. ​ಇವು ಕೇವಲ ನಮಗೆ ಮೇಲ್ನೋಟಕ್ಕೆ ಕಂಡುಬಂದಿರುವ ಅಂಕಿ-ಅಂಶಗಳಾಗಿದ್ದು, ಇನ್ನು ಎಷ್ಟು ಅಕ್ರಮಗಳು ನಡೆದಿವೆಯೋ ಎಂಬುದನ್ನು ಪರಿಶೀಲಿಸಬೇಕಾಗಿದೆ ಎಂದು ಹೇಳಿದರು.

ನಿಯಮ ಉಲ್ಲಂಘಿಸಿ ಖಾಸಗಿ ಜಾಗಗಳಲ್ಲಿ ಫಾರ್ಮ್ ಭರ್ತಿ – ​“ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಬೇಕು. ಮತದಾರರ ಐಡಿ ಪಡೆದು ಕನ್ಫರ್ಮೇಷನ್ ಆದ ಬಳಿಕ ಫಾರ್ಮ್‌ಗಳನ್ನು ಸ್ಕ್ಯಾನ್ ಮಾಡಬೇಕು. ಆದರೆ, ಕ್ಷೇತ್ರಗಳಲ್ಲಿ ಬಿಎಲ್‌ಒಗಳು ಮನೆಗೆ ಹೋಗುತ್ತಿಲ್ಲ. ಬದಲಾಗಿ, ಸುಮ್ಮನೆ ಫಾರ್ಮ್‌ಗಳನ್ನು ಹಂಚುತ್ತಿದ್ದಾರೆ. ಇನ್ನು ಕೆಲವು ಕಡೆ ಮಸೀದಿಗಳು ಮತ್ತು ಖಾಸಗಿ ವಸತಿ ಜಾಗಗಳಲ್ಲಿ ಕುಳಿತು ಬಂಚ್‌ಗಟ್ಟಲೆ ಫಾರ್ಮ್‌ಗಳನ್ನು ಭರ್ತಿ ಮಾಡಲಾಗುತ್ತಿದೆ.

​ಶಿಗ್ಗಾಂವಿ ತಾಲೂಕಿನ ಬಂಕಾಪುರದ ಎರಡು ಮಸೀದಿಗಳಲ್ಲಿ ಈ ರೀತಿ ನಿಯಮಬಾಹಿರವಾಗಿ ಫಾರ್ಮ್‌ಗಳನ್ನು ಭರ್ತಿ ಮಾಡುತ್ತಿರುವುದರ ವಿರುದ್ಧ ಈಗಾಗಲೇ ಅಧಿಕೃತವಾಗಿ ದೂರು ನೀಡಲಾಗಿದೆ ಎಂದು ಅವರು ತಿಳಿಸಿದರು. ಬಿಎಲ್‌ಒಗಳಿಗೆ ಸರಿಯಾದ ತರಬೇತಿ ಇಲ್ಲದ ಕಾರಣ, ಹಲವರಿಗೆ ಸ್ಕ್ಯಾನ್ ಮಾಡಲು ಸಹ ಬರುತ್ತಿಲ್ಲ. ಕೇವಲ ಒಂದು ತಿಂಗಳ ಅವಧಿಯಲ್ಲಿ ಒಂದು ಬೂತ್‌ನ ಕನಿಷ್ಠ 1000 ಮತದಾರರ ಪರಿಶೀಲನೆ ನಡೆಸಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದರು.

ಶೀಘ್ರ ಕ್ರಮಕ್ಕೆ ಆಗ್ರಹ – ​ಚುನಾವಣಾ ಆಯೋಗದ ಅಧಿಕೃತ ಮತದಾರರ ಪಟ್ಟಿಯ ಪ್ರತಿಯನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದ ಬೊಮ್ಮಾಯಿ ಅವರು, ಈ ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಇಂತಹ ನಕಲಿ ಮತ್ತು ದ್ವಿಪ್ರತಿ ಮತಗಳನ್ನು ಪಟ್ಟಿಯಿಂದ ಕೈಬಿಡಬೇಕು ಹಾಗೂ ಪಾರದರ್ಶಕವಾಗಿ ಪರಿಷ್ಕರಣೆ ನಡೆಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ : ಪರಪ್ಪನ ಅಗ್ರಹಾರದಿಂದ 24 ಜೀವಾವಧಿ ಖೈದಿಗಳಿಗೆ ಅವಧಿ ಪೂರ್ವ ಬಿಡುಗಡೆ ಭಾಗ್ಯ..!

Related posts

ಸಂಭ್ರಮದ ಕೆಂಪೇಗೌಡ ಜಯಂತಿ; ನಾಡಪ್ರಭುವಿಗೆ ವಂದಿಸಿದ ಸಿಎಂ ಡಿ.ಕೆ. ಶಿವಕುಮಾರ್

Kalpana Editor

ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದ ಹೈಕೋರ್ಟ್

Kalpana Editor

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಆರೆಂಜ್ ಅಲರ್ಟ್ ಘೋಷಣೆ..!

Kalpana Editor