ನವದೆಹಲಿ : ನೀಟ್ ಪೇಪರ್ ಲೀಕ್ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಗಂಭೀರ ಕಳವಳ ವ್ಯಕ್ತಪಡಿಸಿದ್ದು, ಪರೀಕ್ಷಾ ಅಕ್ರಮ ಎಸಗಿದವರಿಗೆ ಕಠಿಣಾತಿ ಕಠಿಣ ಶಿಕ್ಷೆ ಖಚಿತ ಎಂದು ಹೇಳಿದ್ದಾರೆ. ಎನ್ಡಿಎ ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೀಟ್ ಪೇಪರ್ ಲೀಕ್ ಪ್ರಕರಣದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರ ಮಾತುಗಳನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಮಾಧ್ಯಮಗಳಿಗೆ ವಿವರಿಸಿದ್ದಾರೆ.
ನೀಟ್ ಪೇಪರ್ ಲೀಕ್ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಸರ್ಕಾರ ತಕ್ಷಣದ ಕ್ರಮ ಕೈಗೊಂಡಿದೆ. ತಪ್ಪಿತಸ್ಥರನ್ನು ಬಂಧಿಸಲಾಗಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ತಕ್ಷಣವೇ ಮರುಪರೀಕ್ಷೆಯನ್ನು ಯಾವುದೇ ವಿಳಂಬವಿಲ್ಲದೆ ನಡೆಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪೇಪರ್ ಲೀಕ್ ಆಗುವುದನ್ನು ತಡೆಯುವುದು ಹಾಗೂ ಪಾರದರ್ಶಕ ಪರೀಕ್ಷಾ ವ್ಯವಸ್ಥೆಯನ್ನು ಕಟ್ಟುವುದು ಪ್ರತಿಯೊಬ್ಬರ ರಾಷ್ಟ್ರೀಯ ಜವಾಬ್ದಾರಿಯಾಗಿದೆ.
ಇದಕ್ಕೆ ಶಾಸನಬದ್ಧ ಬೆಂಬಲ ನೀಡಲು ಎನ್ಡಿಎ ಮೈತ್ರಿಕೂಟದ ಪಾಲುದಾರರು ಒಗ್ಗಟ್ಟಿನಿಂದಿರಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ, ದೇಶದ ಯುವಜನರ ಹಿತದೃಷ್ಟಿ ಮತ್ತು ಅವರ ಭವಿಷ್ಯಕ್ಕಾಗಿ ಎಲ್ಲಾ ಸಂಸದರು ಸಂಸತ್ತಿನಲ್ಲಿ ರಚನಾತ್ಮಕವಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ಮೋದಿ ವಿರೋಧ ಪಕ್ಷಗಳಲ್ಲಿ ವಿನಂತಿಸಿದ್ದಾರೆ. ಇದನ್ನೂ ಓದಿ :ಮೈಸೂರಿನಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್..!
