ಮೈಸೂರು : ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 11 ರೋಗಿಗಳು ಮೃತಪಟ್ಟಿರುವ ಪ್ರಕರಣದ ಹಿನ್ನೆಲೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮೈಸೂರಿನ ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಒಂದೇ ದಿನ 11 ರೋಗಿಗಳು ಮೃತಪಟ್ಟಿರುವ ಬಗ್ಗೆ ವಿವರವಾದ ಮಾಹಿತಿ ಕೇಳಿದ್ದೇನೆ. ಕಳೆದ ಹಲವು ವರ್ಷಗಳ ಅಂಕಿ-ಅಂಶಗಳ ಪ್ರಕಾರ ಆಸ್ಪತ್ರೆಯಲ್ಲಿ ಸಾವಿನ ಪ್ರಮಾಣ ಶೇ.4 ರಿಂದ 5 ರಷ್ಟಿದೆ. ಜಯದೇವ ಆಸ್ಪತ್ರೆ ರಾಜ್ಯಕ್ಕಷ್ಟೇ ಅಲ್ಲ, ದೇಶಕ್ಕೂ ಮಾದರಿಯಾಗಿದೆ. ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಜಯದೇವ ಆಸ್ಪತ್ರೆ ವಿರುದ್ಧ ತಪ್ಪು ಮಾಹಿತಿ ಹರಡಿದರೆ ಖಾಸಗಿ ಆಸ್ಪತ್ರೆಗಳಿಗೆ ಲಾಭವಾಗುತ್ತದೆ ಎಂದು ತಿಳಿಸಿದರು.
ಸಾವಿನ ಪ್ರಕರಣಗಳಲ್ಲಿ ಯಾವುದೇ ಲೋಪದೋಷ ಕಂಡುಬಂದರೆ ವೈದ್ಯರಿಂದ ಮಾಹಿತಿ ಪಡೆದು ಸಾರ್ವಜನಿಕರಿಗೆ ತಿಳಿಸಲಾಗುವುದು. ವೈದ್ಯರಿಗೆ ಈ ಬಗ್ಗೆ ಸಂಪೂರ್ಣ ಅವಲೋಕನ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದರು. ಇದೇ ವೇಳೆ ಕಲಬುರಗಿ ಮತ್ತು ಮೈಸೂರು ಜಯದೇವ ಆಸ್ಪತ್ರೆಗಳ ಆಡಳಿತಕ್ಕೆ ಹೆಚ್ಚಿನ ಸ್ವಾಯತ್ತತೆ ನೀಡಲು ಸರ್ಕಾರ ನಿರ್ಧರಿಸಿದೆ ಸಣ್ಣ-ಪುಟ್ಟ ನಿರ್ಧಾರಗಳಿಗಾಗಿ ಬೆಂಗಳೂರಿನ ಮೇಲೆ ಅವಲಂಬಿತವಾಗಿರುವ ವ್ಯವಸ್ಥೆಗೆ ಬದಲಾವಣೆ ತರಲಾಗುತ್ತಿದೆ ಎಂದರು.
ಸ್ಥಳೀಯ ಮಟ್ಟದಲ್ಲೇ ಕೆಲವು ತೀರ್ಮಾನಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗುತ್ತದೆ. ಇದರಿಂದ ಆಡಳಿತ ಹಾಗೂ ಚಿಕಿತ್ಸಾ ಸೇವೆಗಳು ಇನ್ನಷ್ಟು ವೇಗವಾಗಿ ನಡೆಯಲಿವೆ ಎಂದು ಹೇಳಿದರು. ಜಯದೇವ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆಯನ್ನು ಮುಂದಿನ ಎರಡು ತಿಂಗಳೊಳಗೆ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ನೊಂದಿದ್ದ, ವಿದ್ಯಾರ್ಥಿನಿ ಆತ್ಮಹತ್ಯೆ..!
