ಬೆಂಗಳೂರು : ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು ನೀಡಿದ ಹೇಳಿಕೆಯು ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಈ ನಾಡಿನ ದೊರೆ, ಮುಖ್ಯಮಂತ್ರಿಗಳು ಒಂದು ಹೇಳಿಕೆ ಕೊಟ್ಟಿದ್ದಾರೆ. ನೀರಿಲ್ಲ; ಬೆಳೆ ಬೆಳೆಯುವುದು ಬೇಡ. ಭೀಕರ ಬರಗಾಲದ ಮುನ್ಸೂಚನೆ ವಿಚಾರವನ್ನು ಸಂಪುಟದಲ್ಲಿ ಚರ್ಚಿಸಿ ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದ ಕಾರಣ ರೈತರು ಬೆಳೆ ಬೆಳೆಯದಿರಿ ಎಂದು ಸ್ವತಃ ಮುಖ್ಯಮಂತ್ರಿಗಳು ಹೇಳಿದ್ದು ಬಹಳ ಆಶ್ಚರ್ಯ ಮಾತ್ರವಲ್ಲದೇ ಅತ್ಯಂತ ನೋವನ್ನು ತಂದಿದೆ ಎಂದು ನುಡಿದರು.
ನಾವೇನೇ ಹೇಳಿಕೆ ನೀಡಿದರೂ ಪ್ರಬುದ್ಧತೆಯಿಂದ ಮಾತನಾಡಬೇಕು ಎಂದು ವಿನಂತಿಸಿದರು. ಇಡೀ ದೇಶದಲ್ಲಿ ಬರಗಾಲದ ಛಾಯೆ ಮೂಡಿದೆ. ಪ್ರಕೃತಿ ಮುನಿಸಿಕೊಂಡ ಸಂದರ್ಭದಲ್ಲಿ ರಾಜ್ಯದ ರೈತರಿಗೆ ಅಭಯ, ಭರವಸೆಯನ್ನು ಸರಕಾರ ನೀಡಬೇಕಿತ್ತು. ಮುಂದಿನ 15- 20 ದಿನ ಮಳೆ ಬೀಳುವ ಆಶಾಭಾವ ಇದೆ. ಮುಖ್ಯಮಂತ್ರಿಗಳು ಹೇಳಿದರೆಂದು ಬಿತ್ತನೆಯೇ ಮಾಡದೇ ಇದ್ದರೆ ಯಾರು ಹೊಣೆಗಾರರು ಎಂದು ಕೇಳಿದರು. ಇದನ್ನೂ ಓದಿ : ಕಲ್ಲು ಕ್ವಾರಿ ದುರಂತ; ನಿಯಮ ಉಲ್ಲಂಘಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ – ಸಿಎಂ ಡಿ ಕೆ ಶಿವಕುಮಾರ್
