ಬೆಂಗಳೂರು : ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಂತೆಯೇ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ನಲ್ಲಿ ತೀವ್ರ ಪೈಪೋಟಿ ಪ್ರಾರಂಭವಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿ ದೆಹಲಿಗೆ ದೌಡಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಯಲ್ಲಿರುವ ಬೆನ್ನಲ್ಲೇ ಜಾರಕಿಹೊಳಿ ಅವರ ಭೇಟಿ ಮಹತ್ವ ಪಡೆದಿದೆ.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದರೆ, ಸತೀಶ್ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ದೆಹಲಿಗೆ ತೆರಳಿದ್ದಾರೆ. ತಮ್ಮದೇ ಆದ ತಂತ್ರಗಾರಿಕೆ ನಡೆಸುತ್ತಿದ್ದಾರೆ. ಇದೇ ವೇಳೆ, ಸಚಿವ ಪ್ರಿಯಾಂಕ್ ಖರ್ಗೆ ಕೂಡ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಇನ್ನೂ ತಮ್ಮೊಂದಿಗೆ ಚರ್ಚಿಸಿಲ್ಲ ಎಂದು ಜಾರಕಿಹೊಳಿ ಹೇಳಿದ್ದು, ಸಭೆಯಲ್ಲಿ ಅಜೆಂಡಾ ಆಧರಿಸಿ ನಿರ್ಧಾರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
