ನವದೆಹಲಿ : ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ ಅವರು ಹೈಕಮಾಂಡ್ಗೆ ಎರಡು ಪ್ರಮುಖ ವಿಚಾರಗಳಲ್ಲಿ ಬಿಗ್ ಚೆಕ್ಮೇಟ್ ನೀಡಿದ್ದಾರೆ. ಒಬಿಸಿ ಸಮುದಾಯದ ಪ್ರಮುಖ ನಾಯಕನಾಗಿರುವ ಕಾರಣ ಸಿದ್ದರಾಮಯ್ಯನವರನ್ನು ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಹೈಕಮಾಂಡ್ ಆಹ್ವಾನಿಸಿತ್ತು. ಆದರೆ ಹೈಕಮಾಂಡ್ ನೀಡಿದ ಆಫರ್ ಅನ್ನು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.
“ಯಾವುದೇ ಕಾರಣಕ್ಕೂ ನಾನು ರಾಜ್ಯಸಭೆಗೆ ಹೋಗುವುದಿಲ್ಲ. ಏನಿದ್ದರೂ ನಾನು ಕರ್ನಾಟಕ ರಾಜ್ಯದಲ್ಲೇ ಉಳಿದು ರಾಜಕಾರಣ ಮಾಡುತ್ತೇನೆ” ಎಂದು ಪಟ್ಟು ಹಿಡಿದಿದ್ದಾರೆ. ಅಷ್ಟೇ ಅಲ್ಲದೆ, ಅನಿವಾರ್ಯವಾದರೆ ಮುಖ್ಯಮಂತ್ರಿ ಸ್ಥಾನದ ಜೊತೆಗೆ ಎಲ್ಲಾ ರೀತಿಯ ಅಧಿಕಾರಗಳನ್ನು ತ್ಯಾಗ ಮಾಡಲು ಸಿದ್ಧ ಎಂದು ಹೇಳುವ ಮೂಲಕ ಹೈಕಮಾಂಡ್ ನಾಯಕರ ನಿಲುವಿಗೆ ಸೆಡ್ಡು ಹೊಡೆದಿದ್ದಾರೆ.
ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಮತ್ತೊಂದು ಅಚ್ಚರಿಯ ಹೆಜ್ಜೆ ಇಟ್ಟಿದ್ದಾರೆ. ತಮ್ಮ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಯಾವುದೇ ರೀತಿಯ ಸಚಿವ ಸ್ಥಾನ ಸೇರಿದಂತೆ ಯಾವುದೇ ಅಧಿಕಾರ ಹಾಗೂ ಸ್ಥಾನಮಾನಗಳು ಬೇಡ ಎಂದು ಹಠ ಹಿಡಿದಿದ್ದಾರೆ.
ಹೈಕಮಾಂಡ್ ಡಾ. ಯತೀಂದ್ರ ಅವರಿಗೆ ಅವರು ಕೇಳಿದ ಪ್ರಮುಖ ಖಾತೆಯೊಂದಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಿದ್ದರು. ಒಂದು ವೇಳೆ ಯತೀಂದ್ರ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜಕೀಯವಾಗಿ ಬೇರೆ ರೀತಿಯ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬುದು ಹೈಕಮಾಂಡ್ ಲೆಕ್ಕಾಚಾರವಾಗಿತ್ತುಆದರೆ, ಸಿಎಂ ಸಿದ್ದರಾಮಯ್ಯ ಮಾತ್ರ ತಮ್ಮ ಪುತ್ರನಿಗೆ ಸದ್ಯಕ್ಕೆ ಯಾವುದೇ ಸ್ಥಾನಮಾನ ನೀಡುವುದು ಬೇಡ ಎಂದು ಕಠಿಣ ನಿಲುವು ತಳೆದಿದ್ದಾರೆ.
ಡಾ. ಯತೀಂದ್ರ ಅವರು ಸಚಿವರಾಗಲೇಬೇಕು ಎಂಬುದು ಹೈಕಮಾಂಡ್ ಇಚ್ಛೆಯಾಗಿದ್ದು, ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರ ಮನವೊಲಿಸುವಂತೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಅವರು ಸಚಿವ ಕೆ.ಜೆ. ಜಾರ್ಜ್ ಅವರಿಗೆ ಈಗ ಮಹತ್ವದ ಟಾಸ್ಕ್ ನೀಡಿದ್ದಾರೆ.
ರಾಹುಲ್ ಗಾಂಧಿ ಅವರ ಸೂಚನೆಯ ಮೇರೆಗೆ ಸಚಿವ ಕೆ.ಜೆ. ಜಾರ್ಜ್ ಅವರು ಶತಾಯಗತಾಯ ಸಿಎಂ ಸಿದ್ದರಾಮಯ್ಯ ಅವರ ಮನವೊಲಿಸಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಆದರೆ ಜಾರ್ಜ್ ಅವರ ಎಲ್ಲಾ ಸಂಧಾನ ಸೂತ್ರಗಳಿಗೂ “ಬಿಲ್ ಕುಲ್ ಆಗಲ್ಲ” ಎಂದು ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದು ಕುಳಿತಿದ್ದಾರೆ. ಸಿಎಂ ಅವರ ಈ ದಿಢೀರ್ ಕಠಿಣ ನಿಲುವು ಈಗ ಹೈಕಮಾಂಡ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
