August 1, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಪುತ್ರ ಯತೀಂದ್ರ ಸಂಪುಟ ಸೇರ್ಪಡೆಗೆ ಕೊನೆಗೂ ಒಪ್ಪಿದ ಸಿದ್ದರಾಮಯ್ಯ

ಬೆಂಗಳೂರು : ಪುತ್ರ ಡಾ. ಯತೀಂದ್ರ ಅವರ ಸಂಪುಟ ಸೇರ್ಪಡೆಗೆ ಕೊನೆಗೂ ಸಿದ್ದರಾಮಯ್ಯ ಅವರು ಒಪ್ಪಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹೈಕಮಾಂಡ್‌ ನಾಯಕರ ಭೇಟಿಗಾಗಿ ದೆಹಲಿಯತ್ತ ತೆರಳಿದ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಪುತ್ರ ಸಂಪುಟ ಸೇರ್ಪಡೆಗೆ ಒಪ್ಪಿದ್ದಾರೆಂದು ತಿಳಿದುಬಂದಿದೆ.

ಮೊದಲು ದೆಹಲಿಯಲ್ಲಿ ಹೈಕಮಾಂಡ್‌ ನಾಯಕರೊಂದಿಗೆ ಮಾತುಕತೆ ನಡೆಸಿದಾಗ ರಾಜ್ಯಸಭೆ, ಪುತ್ರನಿಗೆ ಸಚಿವ ಸ್ಥಾನ ಎರಡೂ ಬೇಡ ಎಂದು ಸಿದ್ದರಾಮಯ್ಯ ತಿರಸ್ಕರಿಸಿದರು. ಬಳಿಕ ಸಚಿವ ಕೆ.ಜೆ ಜಾರ್ಜ್‌ ಸಿದ್ದರಾಮಯ್ಯ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪುತ್ರನ ಸಂಪುಟ ಸೇರ್ಪಡೆಗೆ ಒಪ್ಪಿರುವ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣವನ್ನ ನಿರಾಕರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜೀನಾಮೆ ಸಲ್ಲಿಕೆಗೂ ಮುನ್ನ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಸಚಿವರ ಕೊನೆಯ ‘ಬ್ರೇಕ್‌ಫಾಸ್ಟ್‌ ಮೀಟಿಂಗ್’ ನಡೆಯಿತು. ಕಾವೇರಿ ನಿವಾಸದ ಅಂಗಳ ಸದಾ ಜನಸಾಗರದಿಂದ, ಅಧಿಕಾರದ ಗಿಜಿಗುಡುವಿಕೆಯಿಂದ ತುಂಬಿರುತ್ತಿತ್ತು. ಆದರೆ ಇಂದು ಅಲ್ಲಿ ಆವರಿಸಿದ್ದ ಮೌನವೇ ಬೇರೆಯಾಗಿತ್ತು.

ಉಪಹಾರ ಸಭೆಯಲ್ಲಿ ಭಾಗಿಯಾಗಿದ್ದ ಪ್ರಮುಖ ಮಂತ್ರಿಗಳು ಮತ್ತು ಆಪ್ತ ನಾಯಕರು ಸಿದ್ದರಾಮಯ್ಯ ಅವರ ಸುದೀರ್ಘ ಹೋರಾಟದ ಪಯಣವನ್ನು ನೆನೆದು ಭಾವುಕರಾದರು. ಹಲವು ಸಚಿವರ ಕಣ್ಣಾಲಿಗಳು ತೇವಗೊಂಡಿದ್ದವು. ಸಹೋದ್ಯೋಗಿ ಮಂತ್ರಿಗಳಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಮಧ್ಯಾಹ್ನ ಭೋಜನ ಬಳಿಕ ರಾಜೀನಾಮೆ ಪತ್ರ ಹಿಡಿದು ಕಾರಿನಲ್ಲಿ ಲೋಕಭವನದತ್ತ (ರಾಜಭವನ) ತೆರಳಿದರು.

ರಾಜ್ಯಪಾಲರು ಪ್ರಸ್ತುತ ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ.

ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಚರಿತ್ರೆಯ ದಣಿವರಿಯದ ಹೋರಾಟಗಾರ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ. ಹೈಕಮಾಂಡ್ ಸೂಚನೆ ಮತ್ತು ರಾಹುಲ್ ಗಾಂಧಿ ಅವರ ಸಂದೇಶಕ್ಕೆ ಗೌರವ ನೀಡಿ, ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ರಾಜ್ಯ ರಾಜಕಾರಣದ ಮಹತ್ವದ ಹಂತವೊಂದಕ್ಕೆ ಭಾವುಕ ತೆರೆ ಎಳೆದಿದ್ದಾರೆ.

Related posts

ಉಡುಪಿ ಜಿಲ್ಲೆಯ ಅಂಬಲಪಾಡಿ ದೇವಸ್ಥಾನದಲ್ಲಿ ವಿಶೇಷ ಪುಷ್ಪಾಲಂಕಾರ..!

Kalpana Editor

ತಾರಕಕ್ಕೇರಿದ ಬಿಡದಿ ಭೂಯುದ್ಧ – ಬಿಜೆಪಿ ಬಿಟ್ಟು ಜೆಡಿಎಸ್ ಪ್ರತ್ಯೇಕ ಪಾದಯಾತ್ರೆ..!

Kalpana Editor

ಎಸಿ ಸ್ಫೋಟ; ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಸಾವು..!

Kalpana Editor