August 26, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಕಲ್ಲು ಕ್ವಾರಿ ದುರಂತ; ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ – ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಬೇಕು – ಆರ್‌.ಅಶೋಕ

ಬೆಂಗಳೂರು : ಮಾದಪಟ್ಟಣದ ಕ್ವಾರಿಯಲ್ಲಿ ಬಂಡೆ ಬಿದ್ದು ಏಳು ಕಾರ್ಮಿಕರು ಮೃತಪಟ್ಟಿರುವುದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಘಟನೆಯಲ್ಲಿ ಗುರುತು ಸಿಗಲಾರದ ಮಟ್ಟಿಗೆ ದೇಹಗಳು ಛಿದ್ರಗೊಂಡಿವೆ. ನಾನು ವೈದ್ಯರನ್ನು ಭೇಟಿ ಮಾಡಿ ತಕ್ಷಣ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದ್ದೇನೆ. ರಾಜ್ಯದಲ್ಲಿ ಅನೇಕ ಕಡೆ ಕ್ವಾರಿ ದಂಧೆ ನಡೆಯುತ್ತಿದೆ. ರಾಜಕಾರಣಿಗಳ ಹೆಸರು ಹೇಳಿಕೊಂಡು ಲೈಸೆನ್ಸ್‌ ಇಲ್ಲದೆಯೇ ಅನಧಿಕೃತವಾಗಿ ಕ್ವಾರಿ ಗಣಿ ನಡೆಯುತ್ತಿದೆ. ಬೆಂಗಳೂರಿಗೆ 15 ಕಿ.ಮೀ. ದೂರದ ಕ್ವಾರಿಯಲ್ಲಿ ಪರಿಶೀಲನೆ ಮಾಡುವ ಯೋಗ್ಯತೆ ಇಲ್ಲದೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಜಕ್ಕೂ ಸತ್ತುಹೋಗಿದೆ ಎಂದು ದೂರಿದರು.

ಕೂಲಿಗಾಗಿ ಬೇರೆ ರಾಜ್ಯದಿಂದ ಬಂದ ಕಾರ್ಮಿಕರು ಮೃತಪಟ್ಟಿದ್ದಾರೆ. ಸರ್ಕಾರ ಅನಧಿಕೃತ ಕ್ವಾರಿ ಗಣಿಗಾರಿಕೆಗೆ ಅವಕಾಶ ನೀಡುವುದು ಸರಿಯಲ್ಲ. ಇದಕ್ಕೆ ಹಿಂದೆಯೂ ಇಂತಹ ಘಟನೆ ನಡೆದಿದ್ದರೂ ಕ್ರಮ ವಹಿಸಿಲ್ಲ. ವಿರೋಧಿಗಳಿದ್ದರೆ ಪೊಲೀಸರು ಹುಡುಕಿಕೊಂಡು ಹೋಗುತ್ತಿದ್ದರು. ಆದರೆ ಇಷ್ಟು ಸಮಯವಾದರೂ ಒಬ್ಬರನ್ನೂ ಬಂಧಿಸಿಲ್ಲ. ಜಿಲ್ಲಾಧಿಕಾರಿಗೆ ಕರೆ ಮಾಡಿದರೆ ಫೋನ್‌ ಕರೆ ಸ್ವೀಕರಿಸುತ್ತಿಲ್ಲ. ಸಚಿವರು ಕೂಡ ಈ ಕಡೆ ಬಂದಿಲ್ಲ. ನಾನು ಸ್ಥಳಕ್ಕೆ ಬಂದು ಕ್ರಮ ವಹಿಸಿ ಎಂದು ಹೇಳುವ ಸ್ಥಿತಿ ಬಂದಿದೆ. ಈ ಸರ್ಕಾರದ ನಿರ್ಲಕ್ಷ್ಯದಿಂದಲೇ ಈ ದುರಂತ ನಡೆದಿದೆ ಎಂದರು.

ಈ ಘಟನೆಗೆ ಕಾರಣರಾದ ತಪ್ಪಿಸ್ಥರನ್ನು ಬಂಧಿಸಬೇಕು. ಕಾರ್ಮಿಕರ ಕುಟುಂಬಕ್ಕೆ ತಲಾ 50 ಲಕ್ಷ ರೂ. ಪರಿಹಾರ ನೀಡಬೇಕು. ಗಾಯಾಳುಗಳು ಚೇತರಿಸಿಕೊಳ್ಳಲು ಬಹಳ ಕಾಲ ಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರಿಗೂ 10 ಲಕ್ಷ ರೂ. ಸಹಾಯ ನೀಡಬೇಕು ಎಂದು ಆಗ್ರಹಿಸಿದರು.

52 ಕ್ರಿಮಿನಲ್‌ ಪ್ರಕರಣ ಹಿಂಪಡೆದ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿರುವ ಕುರಿತು ಪ್ರತಿಕ್ರಿಯಸಿದ ಅವರು, ಮುಸ್ಲಿಮರಿಗೆ ಒಂದು, ಹಿಂದೂಗಳಿಗೆ ಒಂದು ಎಂಬ ಕಾನೂನು ಮಾಡಬಾರದು. ಕಾಂಗ್ರೆಸ್‌ ಸರ್ಕಾರ ಮುಸ್ಲಿಂ ಸಂಘಟನೆಗಳ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆದು, ದೇಶ ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಿದೆ. ಕೋರ್ಟ್‌ ತಡೆಯಾಜ್ಞೆ ನೀಡಿರುವುದರಿಂದ ಸರ್ಕಾರಕ್ಕೆ ಕಪಾಳ ಮೋಕ್ಷವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಮ ಹಾಕಿಕೊಂಡು ದೇವಾಲಯ ಸುತ್ತಿದರೆ ಹಿಂದೂ ಎಂದು ಯಾರೂ ನಂಬಲ್ಲ ಎಂದರು. ಇದನ್ನೂ ಓದಿ : ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜೊತೆ ಸಮಾಲೋಚನೆ ಮಾಡಿ – ಬಿ.ವೈ.ವಿಜಯೇಂದ್ರ

Related posts

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ; ಎಂಟು ಮಸೂದೆಗಳ ಮಂಡನೆ ಸಾಧ್ಯತೆ..!

Kalpana Editor

ನಟ ಆಮೀರ್ ಖಾನ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ..!

Kalpana Editor

ನನಗೆ ನೀರು ಬೇಕು ನಾನು ಮಾತನಾಡುವುದಿಲ್ಲ; ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

kknewskannada1987@gmail.com