July 22, 2026
kranthikidi.com
ತಾಜಾಸುದ್ದಿದೇಶ

ವಾಂಗ್ಚುಕ್‌ರನ್ನು ಭೇಟಿಯಾದ ಕೇಂದ್ರ ಸಚಿವರು; ಇಂದು ಸಿಜೆಪಿ ಜೊತೆ ಮತ್ತೊಂದು ಸಭೆ..!

ನವದೆಹಲಿ : ನೀಟ್‌ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ತಡರಾತ್ರಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಸರ್ಕಾರಿ ಆಸ್ಪತ್ರೆಯಿಂದ ತಮ್ಮಿಷ್ಟದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡಬೇಕೆಂದು ಅವರ ಪತ್ನಿ ಗೀತಾಂಜಲಿ ಆಂಗ್ಮೊ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಸಂವಿಧಾನದ ವಿಧಿ 19 ಮತ್ತು 21ರ ಅಡಿಯಲ್ಲಿ ಪ್ರಜೆಯೊಬ್ಬರಿಗೆ ತಮಗಿಷ್ಟವಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಮೂಲಭೂತ ಹಕ್ಕಿದೆ ಎಂದು ಸ್ಪಷ್ಟಪಡಿಸಿ, ತಕ್ಷಣವೇ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಆದೇಶಿಸಿತು.

ಹೈಕೋರ್ಟ್ ಆದೇಶದಂತೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಅಂಬುಲೆನ್ಸ್ ಮೂಲಕ ಸೋನಮ್ ವಾಂಗ್ಚುಕ್ ಅವರನ್ನು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ಕರೆತರಲಾಯಿತು. ಪ್ರಸ್ತುತ ಅವರನ್ನು ಐಸಿಯುನಲ್ಲಿ ದಾಖಲಿಸಲಾಗಿದ್ದು, ತಜ್ಞ ವೈದ್ಯರ ತಂಡ ನಿರಂತರವಾಗಿ ಅವರ ಆರೋಗ್ಯವನ್ನು ಪರಿಶೀಲಿಸುತ್ತಿದೆ. ಆಸ್ಪತ್ರೆಗೆ ರವಾನಿಸಿದ ಕೆಲವೇ ಗಂಟೆಗಳಲ್ಲಿ ಮಧ್ಯರಾತ್ರಿ 12:30ರ ವೇಳೆಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಆಸ್ಪತ್ರೆಗೆ ಆಗಮಿಸಿ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು.

ಪರೀಕ್ಷಾ ವ್ಯವಸ್ಥೆಯಲ್ಲಾಗಿರುವ ಅಕ್ರಮಗಳ ವಿರುದ್ಧದ ಹೋರಾಟದ ಭಾಗವಾಗಿ ವಾಂಗ್ಚುಕ್ ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವು ಈಗಾಗಲೇ 20ಕ್ಕೂ ಹೆಚ್ಚು ದಿನಗಳನ್ನು ಪೂರೈಸಿದೆ. ಪ್ರತಿಭಟನಾನಿರತ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಸಂಸದರನ್ನು ಭೇಟಿಯಾಗಲು ಅವಕಾಶ ನೀಡುವವರೆಗೆ ಅಥವಾ ಸಂಸದರು ತಮ್ಮನ್ನು ಭೇಟಿಯಾಗುವವರೆಗೆ ಉಪವಾಸ ಹಿಂಪಡೆಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ವಿದ್ಯಾರ್ಥಿ ಪ್ರತಿಭಟನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಇಂದು ಪ್ರತಿಭಟನಾಕಾರರ ಪ್ರತಿನಿಧಿಗಳೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಮುಂದಾಗಿದೆ. ಸೋನಮ್ ವಾಂಗ್ಚುಕ್ ಅವರೊಂದಿಗೆ ತಡರಾತ್ರಿ ನಡೆದ ಭೇಟಿಯ ನಂತರ ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವ ಅಥವಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಧನಾತ್ಮಕ ನಿರೀಕ್ಷೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಇದನ್ನೂ ಓದಿ : ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದು, ತಪ್ಪೆಂದು ಕೈಮುಗಿದು ಬೇಡಿಕೊಂಡ ಆರೋಪಿಗಳು

Related posts

ಉದ್ಯೋಗ ಭವನದ ಬಳಿಯ ಕಾರ್ಮಿಕ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ..!

Kalpana Editor

ಮಾಜಿ ಪ್ರಧಾನಿಯನ್ನ ರಾಜ್ಯ ಸಭೆಗೆ ಕಳುಹಿಸೋಕೆ ಬಿಜೆಪಿಯವರು ಒಪ್ಪಿಲ್ಲ; ರಣದೀಪ್ ಸಿಂಗ್ ಸುರ್ಜೇವಾಲ

Kalpana Editor

ಸಿಎಂ ಆದ ಬಳಿಕ ವಿಜಯ್‌ರನ್ನ ಭೇಟಿಯಾದ ನಟಿ ಸಮಂತಾ

Kalpana Editor